ADVERTISEMENT

ಗುಬ್ಬಿ: ಲೋಕ ಅದಾಲತ್‌ ಸದ್ಬಳಕೆಗೆ ಸಲಹೆ

ಅದಾಲತ್‌ನಿಂದ ಕಕ್ಷಿದಾರರ ಸಮಯ, ಹಣ ಉಳಿತಾಯ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2021, 4:33 IST
Last Updated 15 ಡಿಸೆಂಬರ್ 2021, 4:33 IST
ಲೋಕ ಅದಾಲತ್ ಬಗ್ಗೆ ಮಾಹಿತಿ ನೀಡಿದ ನ್ಯಾಯಾಧೀಶರಾದ ಉಂಡಿ ಮಂಜುಳಾ ಶಿವಪ್ಪ. ನ್ಯಾಯಾಧೀಶರಾದ ಶಿವರಾಜ್ ವಿ. ಸಿದ್ದೇಶ್ವರ್, ಪ್ರೇಮ್‌ಕುಮಾರ್, ವಕೀಲರ ಸಂಘದ ಅಧ್ಯಕ್ಷ ಕೆ.ಜಿ. ನಾರಾಯಣ್ ಹಾಜರಿದ್ದರು
ಲೋಕ ಅದಾಲತ್ ಬಗ್ಗೆ ಮಾಹಿತಿ ನೀಡಿದ ನ್ಯಾಯಾಧೀಶರಾದ ಉಂಡಿ ಮಂಜುಳಾ ಶಿವಪ್ಪ. ನ್ಯಾಯಾಧೀಶರಾದ ಶಿವರಾಜ್ ವಿ. ಸಿದ್ದೇಶ್ವರ್, ಪ್ರೇಮ್‌ಕುಮಾರ್, ವಕೀಲರ ಸಂಘದ ಅಧ್ಯಕ್ಷ ಕೆ.ಜಿ. ನಾರಾಯಣ್ ಹಾಜರಿದ್ದರು   

ಗುಬ್ಬಿ: ‘ಕಕ್ಷಿದಾರರ ಹಣ, ಸಮಯ ಉಳಿಸುವ ಜೊತೆಗೆ ತ್ವರಿತ ನ್ಯಾಯ ಒದಗಿಸುವ ಉದ್ದೇಶದಿಂದ ಡಿ. 18ರಂದು ಬೃಹತ್ ಲೋಕ ಅದಾಲತ್‌ಹಮ್ಮಿಕೊಳ್ಳಲಾಗಿದೆ’ ಎಂದು ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಉಂಡಿ ಮಂಜುಳಾ ಶಿವಪ್ಪ ತಿಳಿಸಿದರು.

ಮಂಗಳವಾರ ಪಟ್ಟಣದ ನ್ಯಾಯಾಲಯದಲ್ಲಿ ಲೋಕ ಅದಾಲತ್ ಬಗ್ಗೆ ಅವರು ಮಾಹಿತಿ ನೀಡಿದರು.

ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಒದಗಿಸುವುದೇ ಕಾನೂನು ಸೇವಾ ಪ್ರಾಧಿಕಾರದ ಗುರಿ. ಕಕ್ಷಿದಾರರು ನ್ಯಾಯಾಲಯದಲ್ಲಿ ವರ್ಷಗಟ್ಟಲೆ ಅಲೆದರೂ ಪರಿಹಾರ ವಿಳಂಬವಾಗುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜನತಾ ನ್ಯಾಯಾಲಯಗಳನ್ನು ನಡೆಸಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ADVERTISEMENT

ಜನತಾ ನ್ಯಾಯಾಲಯದಲ್ಲಿ ಎಲ್ಲಾ ರೀತಿಯ ಸಿವಿಲ್ ಸ್ವರೂಪದ ವ್ಯಾಜ್ಯಗಳ ಜೊತೆಗೆ ಸಂಧಾನ ಮಾಡಬಹುದಾದ ಕ್ರಿಮಿನಲ್ ದಾವೆಗಳನ್ನು ಇತ್ಯರ್ಥಗೊಳಿಸಲಾಗುವುದು. ಎಲ್ಲಾ ಇಲಾಖೆಯ ಮುಖ್ಯಸ್ಥರನ್ನು ಕರೆಸಿ ಇಲಾಖೆಗಳಿಗೆ ಸಂಬಂಧಿಸಿದ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದರು.

ಬ್ಯಾಂಕ್ ಅಧಿಕಾರಿಗಳ ಜೊತೆ ಚರ್ಚಿಸಿ ಸಾಲ ತೀರುವಳಿ ವ್ಯಾಜ್ಯಗಳನ್ನು ಬಗೆಹರಿಸಲಾಗುವುದು. ಹೇಮಾವತಿ ಭೂಸ್ವಾಧೀನಾಧಿಕಾರಿ ಜೊತೆ ಚರ್ಚಿಸಿ ₹ 5 ಲಕ್ಷಕ್ಕಿಂತ ಕಡಿಮೆ ಇರುವ ಪರಿಹಾರವನ್ನು ತಕ್ಷಣ ಭೂಮಿ ಕಳೆದುಕೊಂಡವರಿಗೆ ಕೊಡಿಸುವ ವ್ಯವಸ್ಥೆ ಮಾಡಲಾಗುವುದು ಎಂದರು.

ಜೊತೆಗೆ ವಿವಾಹ ವಿಚ್ಛೇದನ, ವಾಹನ ಅಪಘಾತ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದರು.‌

ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ನ್ಯಾಯಾಂಗ ಇಲಾಖೆಯು ಉತ್ತಮ ನಿರ್ಧಾರ ಕೈಗೊಂಡಿದೆ. ವಕೀಲರು ತಮ್ಮ ಕಕ್ಷಿದಾರರ ಮನವೊಲಿಸಿ ರಾಜೀ ಸಂಧಾನದ ಮೂಲಕ ಹೆಚ್ಚು ದಾವೆಗಳ ಇತ್ಯರ್ಥಕ್ಕೆ ಸಹಕರಿಸಬೇಕು ಎಂದು ತಿಳಿಸಿದರು.

ನ್ಯಾಯಾಧೀಶರಾದ ಶಿವರಾಜ್ ವಿ. ಸಿದ್ದೇಶ್ವರ್, ಪ್ರೇಮ್‌ಕುಮಾರ್, ವಕೀಲರ ಸಂಘದ ಅಧ್ಯಕ್ಷ ಕೆ.ಜಿ. ನಾರಾಯಣ್
ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.