
ತುಮಕೂರು: ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಸರ್ಕಾರಿ ಶಾಲೆ ಮುಚ್ಚುವುದನ್ನು ವಿರೋಧಿಸಿ ತಾಲ್ಲೂಕಿನ ಕೊತ್ತಿಹಳ್ಳಿ, ಅಗಳಕೋಟೆ ಗ್ರಾಮಸ್ಥರು ಎಐಡಿಎಸ್ಒ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
‘ಊರಿನಲ್ಲಿ ಒಂದು ಶಾಲೆ ಇದ್ದಾಗ ಮಾತ್ರ ಆ ಊರು ಪರಿಪೂರ್ಣ ಆಗುತ್ತದೆ. ಹಿರಿಯರ ಹೋರಾಟದ ಫಲವಾಗಿ ಇಲ್ಲಿ ಸರ್ಕಾರಿ ಶಾಲೆ ಆರಂಭಿಸಲಾಗಿದೆ. ಈಗ ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ’ ಎಂದು ಕೊತ್ತಿಹಳ್ಳಿಯ ಕೆ.ವಿ.ಶಶಿಕಲಾ ಹೇಳಿದರು.
ಅಗಳಕೋಟೆಯ ವಿ.ಮಮತಾ, ‘ಹೆಂಚಿನ ಶಾಲೆಯನ್ನು ತುಂಬಾ ಕಷ್ಟಪಟ್ಟು ಅಭಿವೃದ್ಧಿ ಪಡಿಸಲಾಗಿದೆ. ಗ್ರಾಮಕ್ಕೆ ದೇವಸ್ಥಾನದಷ್ಟೇ ಶಾಲೆಯೂ ಮುಖ್ಯ. ಕೂಲಿ ಕಾರ್ಮಿಕರ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆ ಮುಚ್ಚಿ ಅವರ ಭವಿಷ್ಯ ಕಿತ್ತುಕೊಳ್ಳಲಾಗುತ್ತಿದೆ. ಇಂತಹ ನೀತಿ ನಮಗೆ ಬೇಡ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ರಚಿಸಲಾಯಿತು. ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಸಿ.ಬಿ.ಲಕ್ಕಪ್ಪ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.