ADVERTISEMENT

ಸರ್ಕಾರದಿಂದ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2022, 11:13 IST
Last Updated 26 ಆಗಸ್ಟ್ 2022, 11:13 IST
ಅಗ್ನಿ ಬನ್ನಿರಾಯಸ್ವಾಮಿ ಜಯಂತಿ ಸಮಾರಂಭ
ಅಗ್ನಿ ಬನ್ನಿರಾಯಸ್ವಾಮಿ ಜಯಂತಿ ಸಮಾರಂಭ   

ತುಮಕೂರು: ತಿಗಳ ಸಮುದಾಯದ ಮೂಲಪುರುಷ ಹಾಗೂ ಆರಾಧ್ಯ ದೈವ ಅಗ್ನಿ ಬನ್ನಿರಾಯಸ್ವಾಮಿ ಜಯಂತಿಯನ್ನು ಸರ್ಕಾರದ ವತಿಯಿಂದ ಮುಂದಿನ ವರ್ಷದಿಂದಲೇ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಲ್ಲಿ ಶುಕ್ರವಾರ ಪ್ರಕಟಿಸಿದರು.

ನಗರದಲ್ಲಿ ಹಮ್ಮಿಕೊಂಡಿದ್ದ ತಿಗಳ ಕ್ಷತ್ರಿಯರ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿ, ‘ಸರ್ಕಾರದ ವತಿಯಿಂದ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ ಆಚರಿಸಬೇಕು ಎಂಬ ಬೇಡಿಕೆ ಸಾಕಷ್ಟು ವರ್ಷಗಳಿಂದ ಇದೆ. ಇನ್ನು ಮುಂದೆ ಸರ್ಕಾರದಿಂದಲೇ ಆಚರಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು’ ಎಂದರು.

₹12 ಕೋಟಿ ನೆರವು: ಜಿಲ್ಲೆ ಸೇರಿದಂತೆ ವಿವಿಧೆಡೆ ತಿಗಳ ಸಮುದಾಯದಿಂದ ನಿರ್ಮಾಣ ಮಾಡುತ್ತಿರುವ ಸಮುದಾಯ ಭವನಗಳನ್ನು ಪೂರ್ಣಗೊಳಿಸಲು ಸಹಕಾರಿಯಾಗುವಂತೆ ₹12.30 ಕೋಟಿ ಅನುದಾನವನ್ನು ಶೀಘ್ರ ಮಂಜೂರು ಮಾಡಿಕೊಡಲಾಗುವುದು. ಇದರಿಂದ ಅಪೂರ್ಣಗೊಂಡಿರುವ 23 ಸಮುದಾಯ ಭವನಗಳನ್ನು ಪೂರ್ಣಗೊಳಿಸಲು ನೆರವಾಗಲಿದೆ. ತಕ್ಷಣ ಹಣ ಬಿಡುಗಡೆಗೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ADVERTISEMENT

ಅಧ್ಯಯನ ಪೀಠ: ತಿಗಳ ಸಮುದಾಯದ ಇತಿಹಾಸ, ಆಚರಣೆ ಸೇರಿದಂತೆ ಜನಾಂಗದ ಬಗ್ಗೆ ಸಮಗ್ರವಾಗಿ ಅಧ್ಯಯನ ನಡೆಸಿ ಜನರಿಗೆ ತಿಳಿಸಿಕೊಡುವುದು ಹಾಗೂ ಮಾಹಿತಿಯನ್ನು ದಾಖಲಿಸಿಡುವ ಸಲುವಾಗಿ ತುಮಕೂರು ವಿಶ್ವವಿದ್ಯಾನಿಲಯದಲ್ಲಿ ‘ತಿಗಳರ ಅಧ್ಯಯನ ಪೀಠ’ ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು.

ತಿಗಳ ಸಮುದಾಯ ಪ್ರವರ್ಗ 2(ಎ) ರಲ್ಲಿ ಮೀಸಲಾತಿ ಸೌಲಭ್ಯ ಪಡೆಯುತ್ತಿದ್ದು, ಇದರ ಬದಲಾಗಿ ಪ್ರವರ್ಗ–1ರಲ್ಲಿ ಮೀಸಲಾತಿ ಕಲ್ಪಿಸಬೇಕು ಎಂಬ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿ, ‘ಸಮುದಾಯದ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವಂತಹ ನಿರ್ಧಾರ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಅಗತ್ಯ ನೆರವು ಸಿಗಲಿದೆ’ ಎಂದು ತಿಳಿಸಿದರು. ತಿಗಳರ ಅಭಿವೃದ್ಧಿ ನಿಗಮ ಸ್ಥಾಪನೆ ಬೇಡಿಕೆಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.