
ಶಿರಾ: ತಂತ್ರಜ್ಞಾನ ಜೀವನದ ಒಂದು ಭಾಗ, ಆರ್ಟಿಫಿಷಿಯಲ್ ಇಂಟಲಿಜೆನ್ಸಿ (ಎಐ) ತಂತ್ರಜ್ಞಾನ ಮಕ್ಕಳ ಜ್ಞಾನ ವೃದ್ಧಿಗೆ ಸಹಕಾರಿಯಾಗಲಿದೆ ಎಂದು ಪ್ರೊ.ಸುಜಯ್ ಪ್ರಸಾದ್ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಪಟ್ಟನಾಯಕನಹಳ್ಳಿ ಗ್ರಾಮದ ಶಾಂತಿನಿಕೇತನ ವಿದ್ಯಾಸಂಸ್ಥೆಯಲ್ಲಿ ಸೋಮವಾರ ಆರ್ಟಿಫಿಷಿಯಲ್ ಇಂಟಲಿಜೆನ್ಸಿ ಮೂಲಕ ನಿರ್ಮಿಸಿರುವ ಮಾತನಾಡುವ ಟ್ರೀ (ಮರ) ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಈ ತಂತ್ರಜ್ಞಾನವನ್ನು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕವಾಗಿ ಯಶಸ್ಸು ಕಾಣಬೇಕು. ತಂತ್ರಜ್ಞಾನ ಆಧಾರಿತ ಜಗತ್ತಿನಲ್ಲಿ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ತಂತ್ರಜ್ಞಾನ ವಿದ್ಯಾರ್ಥಿ ಜೀವನದಲ್ಲಿ ಹೊಸ ಮಜಲನ್ನು ಬರೆಯಲಿದೆ ಎಂದರು.
ಮುಖ್ಯ ಶಿಕ್ಷಕಿ ಪ್ರತಿಭಾ ಸತೀಶ್ ಕುಮಾರ್ ಮಾತನಾಡಿ, ಡಿಜಿಟಲ್ ತಂತ್ರಜ್ಞಾನ ಪ್ರಸ್ತುತ ಜಗತ್ತಿನಲ್ಲಿ ಬದಲಾವಣೆಯ ಪರ್ವವನ್ನೇ ಆರಂಭಿಸಿದೆ. ಬದಲಾಗುತ್ತಿರುವ ತಂತ್ರಜ್ಞಾನ ಆಧಾರಿತ ಜಗತ್ತಿಗೆ ವಿದ್ಯಾರ್ಥಿಗಳು ಸಜ್ಜಾಗಬೇಕು ಎಂಬ ದೂರ ದೃಷ್ಟಿಯೊಂದಿಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸಿ ಮೂಲಕ ಮಾತನಾಡುವ ಮರವನ್ನು ಶಾಲೆಯಲ್ಲಿ ಆರಂಭಿಸಿದ್ದೇವೆ. ವಿದ್ಯಾರ್ಥಿಗಳು ಕೇಳುವ ಪ್ರಶ್ನೆಗೆ ಕ್ಷಣಮಾತ್ರದಲ್ಲಿ ಉತ್ತರಿಸುವ ಈ ತಂತ್ರಜ್ಞಾನ ಶೈಕ್ಷಣಿಕ ಪ್ರಗತಿ ಜೊತೆಗೆ ಜ್ಞಾನವಿಕಸನಕ್ಕೆ ಸಹಕಾರಿಯಾಗುತ್ತದೆ ಎಂದರು.
ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಪಿ. ಪಾಂಡುರಂಗಯ್ಯ, ಸಂಸ್ಥೆಯ ಕಾರ್ಯದರ್ಶಿ ರೇಣುಕಾ ಪಾಂಡುರಂಗಯ್ಯ, ಉಪನ್ಯಾಸಕ ರಂಗಪ್ಪ, ಶಿಕ್ಷಕ ಕರೇನಾಯಕ, ಪ್ರಜ್ವಲ್, ಮಂಜುನಾಥ್, ಸತೀಶ್, ಮುಮ್ತಾಜ್, ನವ್ಯಶ್ರೀ, ಕೃಷ್ಣಮೂರ್ತಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.