ADVERTISEMENT

ಶುಲ್ಕ ವಿನಾಯಿತಿಗೆ ವಿದ್ಯಾರ್ಥಿಗಳ ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ಮೇ 2020, 14:33 IST
Last Updated 26 ಮೇ 2020, 14:33 IST
ವಿದ್ಯಾರ್ಥಿಗಳು ತಮ್ಮ ಬೇಡಿಕೆ ಒಳಗೊಂಡ ಫಲಕಗಳನ್ನು ಪ್ರದರ್ಶಿಸಿದರು
ವಿದ್ಯಾರ್ಥಿಗಳು ತಮ್ಮ ಬೇಡಿಕೆ ಒಳಗೊಂಡ ಫಲಕಗಳನ್ನು ಪ್ರದರ್ಶಿಸಿದರು   

ತುಮಕೂರು: ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಶನ್‌ (ಎಐಡಿಎಸ್‌ಒ) ಜಿಲ್ಲಾ ಘಟಕ ಮಂಗಳವಾರ ‘ಅಖಿಲ ಕರ್ನಾಟಕ ಆಗ್ರಹ ದಿನ’ ಆಚರಿಸಿತು.

ವಿದ್ಯಾರ್ಥಿಗಳು ಬೇಡಿಕೆಯ ಕರಪತ್ರ, ಭಿತ್ತಿಪತ್ರಗಳ ಫಲಕಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರದರ್ಶಿಸುವ ಮೂಲಕ ಪ್ರತಿಭಟನೆಯಲ್ಲಿ ಭಾಗಿಯಾದರು.

ಲಾಕ್‌ಡೌನ್‌ನಿಂದ ಬಹುತೇಕ ಪೋಷಕರು ಸಂಕಷ್ಟದಲ್ಲಿ ಇದ್ದಾರೆ. ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲಾ, ಕಾಲೇಜುಗಳ ಶುಲ್ಕವನ್ನು ಸರ್ಕಾರವೇ ಭರಿಸಬೇಕು. ವಿಶ್ವವಿದ್ಯಾಲಯಗಳ ಪರೀಕ್ಷಾ ಶುಲ್ಕ ರದ್ದುಗೊಳಿಸಬೇಕು. ಈಗಾಗಲೇ ಶುಲ್ಕ ಪಡೆದಿದ್ದರೆ ಅದನ್ನು ವಾಪಸ್‌ ಮಾಡಬೇಕು. ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್ ನೀಡಬೇಕು. ವಿದ್ಯಾರ್ಥಿ ವೇತನವನ್ನು ಹೆಚ್ಚಿಸಿ, ಕಡ್ಡಾಯವಾಗಿ ನೀಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ADVERTISEMENT

ಸರ್ಕಾರಿ ವಸತಿನಿಲಯಗಳ ಅನುದಾನವನ್ನು ಹೆಚ್ಚಿಸಬೇಕು. ಆನ್‌ಲೈನ್‌ ತರಗತಿಗಳ ಆಧಾರದ ಮೇಲೆ ಪರೀಕ್ಷೆಗಳನ್ನು ನಡೆಸಬಾರದು. ಪರೀಕ್ಷೆಯ ರೂಪುರೇಷೆಯನ್ನು ಶಿಕ್ಷಣ ತಜ್ಞರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಜೊತೆಯಲ್ಲಿ ಚರ್ಚಿಸಿ ರೂಪಿಸಬೇಕು. ಕ್ವಾರಂಟೈನ್ ಕೇಂದ್ರಗಳಾಗಿಸಿದ ಶಾಲೆ, ಕಾಲೇಜು ಹಾಗೂ ಹಾಸ್ಟೆಲ್ ಕಟ್ಟಡಗಳನ್ನು ಸಂಪೂರ್ಣವಾಗಿ ಶುದ್ಧೀಕರಿಸಿದ ನಂತರವೇ ವಿದ್ಯಾರ್ಥಿಗಳ ಬಳಕೆಗೆ ತೆರೆಯಬೇಕು ಎಂದು ಆಗ್ರಹಿಸಲಾಯಿತು ಎಂದು ಸಂಘಟನೆ ಪದಾಧಿಕಾರಿ ಟಿ.ಇ.ಅಶ್ವಿನಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.