ತುಮಕೂರು: ದೇಶದಲ್ಲಿರುವ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ಕಾಣುತ್ತಿರುವುದು ಸರಿಯಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪ ಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ನಿರ್ಮಿಸಲಾಗುತ್ತಿದೆ. ಇದು ಬದಲಾಗಬೇಕು. ಎಲ್ಲ ವಿದ್ಯಾರ್ಥಿಗಳಿಗೆ ಸಾಮಾನ್ಯ ಹಾಸ್ಟೆಲ್ಗಳನ್ನು ಕಲ್ಪಿಸಬೇಕು. ಎಲ್ಲರು ಒಟ್ಟಿಗೆ ಬಾಳುವಂತ ವ್ಯವಸ್ಥೆ ಮಾಡಬೇಕು. ಇದರಿಂದ ಜಾತಿ ಪದ್ಧತಿ ಹೋಗಲಾಡಿಸಬಹುದು ಎಂದು ಅಭಿಪ್ರಾಯಪಟ್ಟರು.
ಸಂವಿಧಾನ ರಚಿಸಿದಾಗ ಸಾಕಷ್ಟು ಟೀಕೆ ಮಾಡಿದರು. ಸಂವಿಧಾನವನ್ನು ನಕಲು ಮಾಡಲಾಗಿದೆ ಎಂದು ಆರೋಪಿಸಿದರು. ಸಂವಿಧಾನದಲ್ಲಿ ಯಾವ ಅಂಶಗಳನ್ನು, ಯಾವ ದೇಶದ ಸಂವಿಧಾನದಿಂದ, ಯಾವ ಕಾರಣಕ್ಕಾಗಿ ಅಳವಡಿಸಿಕೊಳ್ಳಲಾಗಿದೆ ಎಂಬುದನ್ನೂ ಸ್ಪಷ್ಟಪಡಿಸಿದ್ದಾರೆ. ಆದರೂ ಸಂವಿಧಾನವನ್ನು ಟೀಕಿಸಲಾಗುತ್ತಿದೆ ಎಂದು ಬೇಸರದ ಮಾತುಗಳನ್ನಾಡಿದರು.
ಸಂವಿಧಾನ ಪೀಠಿಕೆಯ ಅಂಶಗಳನ್ನು ಎಷ್ಟರ ಮಟ್ಟಿಗೆ ಅನುಷ್ಠಾನಗೊಳಿಸಿದ್ದೇವೆ ಎಂದು ನಮ್ಮನ್ನು ನಾವೇ ಪ್ರಶ್ನಿಸಿಕೊಳ್ಳಬೇಕಿದೆ. ಸಮಾನತೆ, ಭ್ರಾತೃತ್ವದ ಬದುಕು ಸಾಧ್ಯವಾಗಿಲ್ಲ. ಇದರ ನಡುವೆಯೂ ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಯುವ ಜನತೆ ಇದನ್ನು ಅರಿತುಕೊಳ್ಳಬೇಕು ಎಂದರು.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಚಂದ್ರಶೇಖರ್ಗೌಡ, ಮುಖಂಡರಾದ ಇಕ್ಬಾಲ್ ಅಹ್ಮದ್, ಕೆಂಚಮಾರಯ್ಯ, ರಫೀಕ್ ಅಹ್ಮದ್ ಇತರರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.