ADVERTISEMENT

ಅಂಬೇಡ್ಕರ್ ವಿಚಾರಗಳು ಸಾರ್ವಕಾಲಿಕ

ಸಿಐಟಿಯು ಆಯೋಜಿಸಿದ್ದ ಅಂಬೇಡ್ಕರ್‌ ಜಯಂತಿಯಲ್ಲಿ ಈ.ಶಿವಣ್ಣ ಅಭಿಪ್ರಾಯ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2019, 15:58 IST
Last Updated 21 ಏಪ್ರಿಲ್ 2019, 15:58 IST

ತುಮಕೂರು: ಸಂವಿಧಾನದ ಮೂಲಕ ಸರ್ವರಿಗೂ ಸಮಾನ ಹಕ್ಕನ್ನು ನೀಡಿದ ಡಾ.ಬಿ.ಆರ್.ಅಂಬೇಡ್ಕರ್‌ ಅವರ ವಿಚಾರಗಳು ಸಾರ್ವಕಾಲಿಕ ಸತ್ಯವಾಗಿವೆ ಎಂದು ದಲಿತ ಹಕ್ಕುಗಳ ಸಮಿತಿಯ ಜಿಲ್ಲಾ ಮುಖಂಡ ಈ.ಶಿವಣ್ಣ ತಿಳಿಸಿದರು.

ನಗರದ ಪಿಟ್‌ವೆಲ್ ಟೂಲ್ಸ್ ಅಂಡ್ ಪೋರ್ಜಿಂಗ್ ಲಿಮಿಟೆಡ್‌ ಕಂಪನಿಯಲ್ಲಿ ಕಾರ್ಮಿಕರ ಸಂಘ ಸಿಐಟಿಯು ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅಂಬೇಡ್ಕರ್‌, ಹರಿಯುವ ನದಿ ಇದ್ದಂತೆ ಅದಕ್ಕೆ ಕೊನೆಯೆಂಬುದೇ ಇಲ್ಲ. ಅವರು ರೂಪಿಸಿದ ಕಾನೂನುಗಳಿಂದ ಕಾರ್ಮಿಕರಿಗೆ ನ್ಯಾಯ ದೊರಕುತ್ತಿದ್ದು ಅವರ ಬಗ್ಗೆ ಹೆಚ್ಚು ಅಧ್ಯಯನ ಮಾಡಬೇಕಾಗಿದೆ ಎಂದು ಹೇಳಿದರು.

ADVERTISEMENT

ಸಮುದಾಯ ಸಂಘಟನೆಯ ಜಿಲ್ಲಾ ಸಂಚಾಲಕ ಕೆ.ಈ.ಸಿದ್ದಯ್ಯ ಮಾತನಾಡಿ, ‘ಅಂಬೇಡ್ಕರ್ ಕೇವಲ ದಲಿತರಿಗೆ ಮೀಸಲಾತಿ ಕಲ್ಪಿಸಿದ್ದಾರೆ, ಉಳಿದವರಿಗೆ ನೀಡಿಲ್ಲ ಎಂಬುದು ತಪ್ಪು ಗ್ರಹಿಕೆ. ಸಂವಿಧಾನದಲ್ಲಿ ಹಿಂದುಳಿದ, ಮೇಲ್ಜಾತಿ ಮತ್ತು ಸಾಮಾನ್ಯ ವರ್ಗದವರಿಗೂ ಸಮಾನವಾಗಿ ಮೀಸಲಾತಿ ಕಲ್ಪಿಸಲಾಗಿದ್ದು ಎಲ್ಲರೂ ಲಾಭ ಪಡೆಯುತ್ತಿದ್ದಾರೆ. ಇದನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ’ ಎಂದು ಮನವಿ ಮಾಡಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಸಂಚಾಲಕ ಬಿ.ಉಮೇಶ್, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ದಲಿತ ಸಂಘರ್ಷ ಸಮಿತಿ ಮುಖಂಡ ನರಸಿಂಹಮೂರ್ತಿ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.