ADVERTISEMENT

ಸಿದ್ಧರಬೆಟ್ಟದಲ್ಲಿ ಜೂನ್ 12ರಂದು 17ನೇ ವರ್ಷದ ವಾರ್ಷಿಕೋತ್ಸವ

​ಪ್ರಜಾವಾಣಿ ವಾರ್ತೆ
Published 9 ಜೂನ್ 2023, 12:34 IST
Last Updated 9 ಜೂನ್ 2023, 12:34 IST
ವೀರಭದ್ರಶಿವಾಚಾರ್ಯ ಸ್ವಾಮೀಜಿ
ವೀರಭದ್ರಶಿವಾಚಾರ್ಯ ಸ್ವಾಮೀಜಿ   

ಕೊರಟಗೆರೆ: ತಾಲ್ಲೂಕಿನ ಸಿದ್ಧರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದಲ್ಲಿ ಜೂನ್ 12ರಂದು 17ನೇ ವರ್ಷದ ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಮಠದ ಪೀಠಾಧ್ಯಕ್ಷ ವೀರಭದ್ರಶಿವಾಚಾರ್ಯ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಗದ್ಗುರು ರೇಣುಕಾಚಾರ್ಯ ಜಯಂತಿ, ಜಗಜ್ಯೋತಿ ಬಸವೇಶ್ವರ ಜಯಂತಿ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮ ಮತ್ತು ಜನಜಾಗೃತಿ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಬಾಳೆಹೊನ್ನೂರು ಪೀಠದ ಡಾ. ಪ್ರಸನ್ನರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಸ್ವಾಮೀಜಿ, ಗೃಹ ಸಚಿವ ಡಾ.ಜಿ. ಪರಮೇಶ್ವರ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ ಎಂದರು.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 6.30ಕ್ಕೆ ಉಚಿತ ಸಾಮೂಹಿಕ ದೀಕ್ಷಾ ಸಂಸ್ಕಾರ, ಬೆಳಿಗ್ಗೆ 7.30ಕ್ಕೆ ಜಗದ್ಗುರು ರೇಣುಕಾಚಾರ್ಯ, ಕ್ಷೇತ್ರನಾಥ ಸಿದ್ದೇಶ್ವರ ಸ್ವಾಮೀಜಿ ಹಾಗೂ ಬಸವೇಶ್ವರರ ಪಲ್ಲಕ್ಕಿ ಉತ್ಸವ, ಬೆಳಿಗ್ಗೆ 8.30ಕ್ಕೆ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ವಿವಾಹ ಶಾಸ್ತ್ರ ಹಾಗೂ ಧಾರೆ ಕಾರ್ಯಕ್ರಮ ನಡೆಯಲಿದೆ. ಪುಸ್ತಕ ದಾಸೋಹ ಸಮಾರಂಭ ಹಮ್ಮಿಕೊಂಡಿದ್ದು, ಇದರಲ್ಲಿ ಪಾಳ್ಗೊಳ್ಳುವವರು ಒಂದು ಪುಸ್ತಕ ತಂದು 2 ಪುಸ್ತಕ ತೆಗೆದುಕೊಳ್ಳಬಹುದು. 10 ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಇಡಲಾಗಿರುತ್ತದೆ ಎಂದು ತಿಳಿಸಿದರು.

ADVERTISEMENT

ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಸಂಸದ ಜಿ.ಎಸ್.ಬಸವರಾಜ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಮಠಾಧೀಶರು ಭಾಗವಹಿಸುವರು.

ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 16 ಜೋಡಿ ವಧು-ವರರು ದಾಂಪತ್ಯಕ್ಕೆ ಕಾಲಿಡಲಿದ್ದಾರೆ. ವಿವಿಧ ಸಾಧಕರಿಗೆ ಸನ್ಮಾನ ಇರಲಿದೆ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.