ತುಮಕೂರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಅವಾಚ್ಯವಾಗಿ ನಿಂದಿಸಿದ ಆರೋಪ ಎದುರಿಸುತ್ತಿರುವ ಸಿ.ಟಿ.ರವಿ ವಿಚಾರದಲ್ಲಿ ಪೊಲೀಸರು ಅತಿರೇಕದಿಂದ ವರ್ತಿಸಿದ್ದಾರೆ. ವಿಧಾನ ಪರಿಷತ್ ಸಭಾಪತಿ ಅಧಿಕಾರದ ಮೇಲೆ ದಾಳಿ ನಡೆದಿದೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದರು.
ತುಮಕೂರು ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ರಾಜ್ಯಶಾಸ್ತ್ರ ಶಿಕ್ಷಕರ 20ನೇ ಸಮ್ಮೇಳನದ ಎರಡನೇ ದಿನವಾದ ಮಂಗಳವಾರ ‘ಪ್ರಸ್ತುತ ರಾಜಕಾರಣ ಪ್ರಜಾಪ್ರಭುತ್ವಕ್ಕೆ ಪೂರಕವಾಗಿದೆಯೇ’ ಎಂಬ ಗೋಷ್ಠಿಯಲ್ಲಿ ಅವರು ಮಾತನಾಡಿದರು.
ವಿಧಾನ ಪರಿಷತ್ ಒಳಗಡೆ ನಡೆದ ಘಟನೆಗೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಪರಿಷತ್ ಸಭಾಪತಿ ನಿರ್ಧರಿಸುವ ವಿಚಾರದಲ್ಲಿ ಪೊಲೀಸರು ಮಧ್ಯ ಪ್ರವೇಶಿಸಿದ್ದಾರೆ. ಅವರನ್ನೇ ಕಡೆಗಣಿಸಿ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನು ಸಭಾಪತಿ ಅಧಿಕಾರದ ಮೇಲೆ, ಪ್ರಜಾಪ್ರಭುತ್ವದ ಮೇಲೆ ನಡೆದ ದಾಳಿ ಎಂದೇ ಹೇಳಬೇಕಾಗುತ್ತದೆ. ಪೊಲೀಸರ ನಿರ್ಧಾರ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ತರಾಟೆಗೆ ತೆಗೆದುಕೊಂಡರು.
ಈ ವಿಚಾರದಲ್ಲಿ ಪೊಲೀಸರು ಹೇಗೆ ಎಫ್ಐಆರ್ ದಾಖಲಿಸುತ್ತಾರೆ? ಸಭಾಪತಿ ಅಧಿಕಾರದ ಮೇಲೆ ಹೇಗೆ ದಾಳಿ ನಡೆದಿದೆ ಎಂಬ ವಿಚಾರ ಚರ್ಚೆ ಆಗಬೇಕಿತ್ತು. ಆದರೆ ಅದೆಲ್ಲ ಚರ್ಚೆಯಾಗಲಿಲ್ಲ ಎಂದು ವಿಷಾದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.