ತುಮಕೂರು: ಇಲ್ಲಿನ ಸಿದ್ಧಗಂಗಾ ಮಠಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದರು.
ಈ ವೇಳೆ ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ಮಠದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು ಸಿದ್ಧಗಂಗಾಮಠದಿಂದ ₹ 25 ಲಕ್ಷ ಹಾಗೂ ಸಿದ್ಧಗಂಗಾ ಶಿಕ್ಷಣ ಸಂಸ್ಥೆಗಳಿಂದ ₹ 25 ಲಕ್ಷದ ಚೆಕ್ ಅನ್ನು ಮುಖ್ಯಮಂತ್ರಿ ಅವರಿಗೆ ಹಸ್ತಾಂತರಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಯಡಿಯೂರಪ್ಪ, ‘ನೆರೆ ಮತ್ತು ಬರದಿಂದ ರಾಜ್ಯದಲ್ಲಿ ಜನ ಸಂಕಷ್ಟ ಎದುರಿಸುತ್ತಿದ್ದಾರೆ. ಕಷ್ಟ ದೂರವಾಗಿ ಜನರು ನೆಮ್ಮದಿಯಿಂದ ಇರಲು ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದೇನೆ. ಸ್ವಾಮೀಜಿ ಬದುಕಿದ್ದರೆ ನಾನು ಮುಖ್ಯಮಂತ್ರಿ ಆಗಿರುವುದನ್ನು ಕಂಡು ಹೆಚ್ಚು ಖುಷಿ ಪಡುತ್ತಿದ್ದರು. ಅವರ ಆಶೀರ್ವಾದ ನನ್ನ ಮೇಲೆ ಸದಾ ಇರುತ್ತದೆ’ ಎಂದು ಹೇಳಿದರು.
ಯಾರಿಗೂ ಅಸಮಾಧಾನವಿಲ್ಲ: ‘ಸಚಿವ ಸಂಪುಟ ರಚನೆ ವಿಚಾರವಾಗಿ ಯಾರಿಗೂ ಅಸಮಾಧಾನ ಇಲ್ಲ. ಶಾಸಕ ಉಮೇಶ್ ಕತ್ತಿ ಅವರಿಗೆ ಪಕ್ಷವು ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ನೀಡಲಿದೆ. ಅವರ ಜತೆ ಬಸವರಾಜ ಬೊಮ್ಮಾಯಿ ಈಗಾಗಲೇ ಮಾತನಾಡಿದ್ದಾರೆ. ಎಂ.ಪಿ.ರೇಣುಕಾಚಾರ್ಯ ಅವರನ್ನು ಕರೆಯಿಸಿ ಮಾತನಾಡುವೆ’ ಎಂದು ತಿಳಿಸಿದರು.
ವಲಸಿಗರಿಗೂ ಆದ್ಯತೆ ಕೊಡಬೇಕು– ಈಶ್ವರಪ್ಪ (ಹುಬ್ಬಳ್ಳಿ ವರದಿ): ‘ಸಚಿವ ಸ್ಥಾನ ಸಿಗದಿದ್ದಕ್ಕೆ ಕೆಲವರಿಗೆ ಬೇಸರವಾಗುವುದು ಸಹಜ. ಆದರೆ, ಕಾಂಗ್ರೆಸ್– ಜೆಡಿಎಸ್ನಿಂದ ಬರುವವರಿಗೂ ಸೂಕ್ತ ಸ್ಥಾನಮಾನ ನೀಡಬೇಕಾಗುತ್ತದೆ. ಹಾಗಾಗಿ, ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಸಚಿವ ಸಂಪುಟ ವಿಸ್ತರಿಸಲಾಗಿದೆ’ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಹುಬ್ಬಳ್ಳಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಅಸಮಾಧಾನಿತರನ್ನು ಸಮಾಧಾನಪಡಿಸಿ ಎಲ್ಲವನ್ನು ಸರಿದೂಗಿಸಿಕೊಂಡು ಹೋಗಲಾಗುವುದು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.