
ತುಮಕೂರು: ಜಿಲ್ಲಾ ಆಡಳಿತ ನೀಡುವ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನಗರದ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ಪ್ರದಾನ ಮಾಡಲಾಯಿತು.
ರಾಜ್ಯ ಸರ್ಕಾರಿ ನೌಕರರ ಸಂಘ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದ ಚಾಲನೆ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಹಾಗೂ ವಿಶ್ವವಿದ್ಯಾಲಯದ ಕುಲಸಚಿವರಾದ ನಾಹಿದಾ ಜಮ್ ಜಮ್ ಸೇರಿ 22 ಮಂದಿಗೆ ಪ್ರಶಸ್ತಿ ವಿತರಿಸಲಾಯಿತು.
ರಾಷ್ಟ್ರೀಯ ಕೊಕ್ಕೊ ಕ್ರೀಡಾಪಟು ಚೈತ್ರ, ಸ್ಕೇಟಿಂಗ್ ಕ್ರೀಡಾಪಟು ಜಯತೀಕ್ಷ ಅವರನ್ನು ಗೌರವಿಸಲಾಯಿತು.
ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ‘ಚಲನೆಯೇ ಜೀವನ, ಜಡತೆಯೇ ಸಾವು. ಮನುಷ್ಯ ಸದಾ ಕ್ರಿಯಾಶೀಲವಾಗಿರಬೇಕು. ಅಂತಹವರು ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯ. ಸರ್ಕಾರಿ ನೌಕರರು ಕ್ರಿಯಾಶೀಲರಾಗಿರಬೇಕು’ ಎಂದು ಸಲಹೆ ಮಾಡಿದರು.
ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಎರಡು ಬಾರಿ ಮುಖ್ಯಮಂತ್ರಿ ಕಾರ್ಯಕ್ರಮ, ದಸರಾ ಉತ್ಸವ, ಒಲಿಂಪಿಕ್ಸ್ ಕ್ರೀಡಾಕೂಟ ಸೇರಿದಂತೆ ರಾಜ್ಯ ಮಟ್ಟದ ಹಲವಾರು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸಲಾಗಿದೆ. ಇದರ ಯಶಸ್ಸು ನೌಕರರಿಗೇ ಸೇರಬೇಕು ಎಂದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ, ‘ಸರ್ಕಾರಿ ನೌಕರರ ಮೇಲೆ ಹಲ್ಲೆ, ನಿಂದನೆಗೆ ಕಡಿವಾಣ ಹಾಕಲು ಶೀಘ್ರವೇ ಸರ್ಕಾರ ಆದೇಶ ಹೊರಡಿಸಲಿದೆ. ಹೊಸ ಪಿಂಚಣಿ ಯೋಜನೆ ಬದಲಿಗೆ ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಹೋರಾಟ ಮುಂದುವರಿಸಲಾಗಿದೆ. ಈ ಬಗ್ಗೆ ಸರ್ಕಾರದೊಂದಿಗೆ ನಿರಂತರ ಮಾತುಕತೆ ನಡೆಯುತ್ತಿದೆ’ ಎಂದು ಹೇಳಿದರು.
ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಇ.ರಮೇಶ್, ಸಂಘದ ಕಾರ್ಯದರ್ಶಿ ಆರ್.ಪರಮೇಶ್ವರ, ರಾಜ್ಯ ಕ್ರೀಡಾ
ಕಾರ್ಯದರ್ಶಿ ಮೋಹನ್ ಕುಮಾರ್, ಮಧುಗಿರಿ ಶೈಕ್ಷಣಿಕ ಜಿಲ್ಲೆ ನೌಕರರ ಸಂಘದ ಅಧ್ಯಕ್ಷ ರಂಗಪ್ಪ, ಮಹಾನಗರ ಪಾಲಿಕೆ ಆಯುಕ್ತರಾದ ಬಿ.ಶುಭ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ಮೊದಲಾದವರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.