ADVERTISEMENT

ಬಿಜೆಪಿ–ಜೆಡಿಎಸ್‌ ಮೈತ್ರಿ: ಸ್ಥಳೀಯ ನಾಯಕರಿಗಿಲ್ಲ ಖಾತ್ರಿ!

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2023, 5:47 IST
Last Updated 27 ಸೆಪ್ಟೆಂಬರ್ 2023, 5:47 IST
ಬಿ.ಎನ್.ಬಚ್ಚೇಗೌಡ
ಬಿ.ಎನ್.ಬಚ್ಚೇಗೌಡ   

ತುಮಕೂರು: ಜೆಡಿಎಸ್– ಬಿಜೆಪಿ ಮೈತ್ರಿಗೆ ಮೊದಲಿನಿಂದಲೂ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸುತ್ತಿರುವ ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್‌ನ ಡಿ.ಸಿ.ಗೌರಿಶಂಕರ್ ಪಕ್ಷ ತೊರೆಯಲು ಮುಂದಾಗಿದ್ದಾರೆ. ಮೊದಲೇ ಹೊಂದಾಣಿಕೆ ಸುಳಿವು ಅರಿತಿದ್ದ ಅವರು ಅದಾಗಲೇ ಕಾಂಗ್ರೆಸ್ ನಾಯಕರ ಜತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.

ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಹಿಂದಿನಿಂದಲೂ ಬಿಜೆಪಿ ಶಾಸಕ ಬಿ.ಸುರೇಶ್‌ಗೌಡ ಹಾಗೂ ಗೌರಿಶಂಕರ್ ನಡುವೆ ಬದ್ಧ ರಾಜಕೀಯ ವೈರತ್ವ ಇದೆ. ಲೋಕಸಭೆಗೆ ಮಾಡಿಕೊಂಡಿರುವ ಒಪ್ಪಂದ ವಿಧಾನಸಭೆಗೂ ಮುಂದುವರಿದರೆ ಜೆಡಿಎಸ್‌ನಿಂದ ಟಿಕೆಟ್ ಸಿಗುವುದೆ? ಎಂಬ ಅನುಮಾನ ಗೌರಿಶಂಕರ್‌ ಅವರನ್ನು ಕಾಡುತ್ತಿದೆ.‘ಹಾಲಿ ಶಾಸಕ ಎಂಬ ಕಾರಣಕ್ಕೆ ಸುರೇಶ್‌ಗೌಡ ಅವರಿಗೆ ಟಿಕೆಟ್ ಕೊಟ್ಟರೆ, ಸೋತಿರುವ ನನಗೆ ಟಿಕೆಟ್ ಕೈತಪ್ಪಬಹುದು’ ಎಂಬ ಕಾರಣಕ್ಕೆ ಅವರು ಈಗಲೇ ಪಕ್ಷ ಬಿಡಲು ಸಜ್ಜಾಗಿದ್ದಾರೆ.

ಬಿಜೆಪಿ ಸಂಸದ ಜಿ.ಎಸ್.ಬಸವರಾಜು ಮೈತ್ರಿಗೆ ವಿರೋಧ ವ್ಯಕ್ತಪಡಿಸುತ್ತಿಲ್ಲ. ಆದರೆ ತುಮಕೂರು ಲೋಕಸಭೆ ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸ್ಪರ್ಧೆ ಮಾಡುವುದನ್ನು ಬಹಿರಂಗವಾಗಿ ವಿರೋಧಿಸುತ್ತಿದ್ದಾರೆ. ಹಿಂದಿನಿಂದಲೂ ರಾಜಕೀಯ ಕಾರಣಕ್ಕೆ ವಿರೋಧ ಮಾಡಿಕೊಂಡು ಬಂದಿದ್ದಾರೆ. ಈಗ ಹೇಮಾವತಿ ನೀರಿನ ವಿಚಾರದಲ್ಲಿ ಜಿಲ್ಲೆಗೆ ಅನ್ಯಾಯ ಮಾಡಿದ್ದಾರೆ ಎಂಬ ವಿಚಾರ ಮುಂದಿಟ್ಟುಕೊಂಡು ವಿರೋಧಿಸುತ್ತಿದ್ದಾರೆ.

ADVERTISEMENT

ರಾಜ್ಯ ಮಟ್ಟದಲ್ಲಿ ಹೊಂದಾಣಿಕೆಗೆ ಸಹಮತ ವ್ಯಕ್ತಪಡಿಸಿರುವ ಕುಣಿಗಲ್ ಕ್ಷೇತ್ರದಲ್ಲಿ ಸ್ಪರ್ಧಿಸಿ ಪರಾಭವಗೊಂಡಿರುವ ಬಿಜೆಪಿಯ ಡಿ.ಕೃಷ್ಣಕುಮಾರ್ ಅವರು ತಾಲ್ಲೂಕು ಮಟ್ಟದ ಹೊಂದಾಣಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ಮೇಲೆ ಬಿಜೆಪಿ ಕಣ್ಣು!

ಜೆಡಿಎಸ್–ಬಿಜೆಪಿ ಮೈತ್ರಿ ಪರಿಣಾಮ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಬಿಜೆಪಿಗೆ ದೊರೆಯುತ್ತದೆ ಎನ್ನುವ ನಿರೀಕ್ಷೆ ಇದೆ. ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಚುನಾವಣಾ ನಿವೃತ್ತಿ ಘೋಷಿಸುವಾಗ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದ ಬಿಜೆಪಿಗೆ ಹಿನ್ನಡೆ ಎಂದು ಪ್ರತಿಪಾದಿಸಿದ್ದಾರೆ. ಅಲ್ಲದೆ ಬಿಜೆಪಿಯ ಯಾವುದೇ ಸಭೆ ಸಮಾರಂಭಗಳಲ್ಲಿಯೂ ಪಾಲ್ಗೊಳ್ಳುತ್ತಿಲ್ಲ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕೆಲವು ಜೆಡಿಎಸ್ ಮುಖಂಡರು ‘ವರಿಷ್ಠರ ತೀರ್ಮಾನಕ್ಕೆ ಬದ್ಧ’ ಎಂದು ಘೋಷಿಸುತ್ತಿದ್ದಾರೆ. ಮತ್ತೊಂದು ಕಡೆ ಚಿಕ್ಕಬಳ್ಳಾಪುರದ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ‘ಮೈತ್ರಿಯಾದರೆ ನಮ್ಮ ನಿಲುವು ತಿಳಿಸುತ್ತೇವೆ’ ಎಂದರೆ ಕೆಲವು ಮುಖಂಡರು ‘ಜೆಡಿಎಸ್ ಪಕ್ಷವೇ ಅಭ್ಯರ್ಥಿ ಕಣಕ್ಕೆ ಇಳಿಸಬೇಕು’ ಎಂದು ಪ್ರತಿಪಾದಿಸುತ್ತಿದ್ದಾರೆ. ಕಳೆದ ಮೂರು ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಬಲವನ್ನು ಹೆಚ್ಚಿಸಿಕೊಳ್ಳುತ್ತಲೇ ಇದೆ. ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಹೆಸರು ಮುಂಚೂಣಿಯಲ್ಲಿದೆ.  ಒಕ್ಕಲಿಗ ಸಮುದಾಯದ ಮತಗಳೇ ನಿರ್ಣಾಯಕವಾಗಿರುವ ಈ ಕ್ಷೇತ್ರದಲ್ಲಿ ಜೆಡಿಎಸ್‌ಗೆ ತನ್ನದೇ ಆದ ಪ್ರಾಬಲ್ಯವಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್–ಜೆಡಿಎಸ್ ಮೈತ್ರಿಯ ಹೊರತಾಗಿಯೂ ಈ ಕ್ಷೇತ್ರ ಬಿಜೆಪಿ ಪಾಲಾಗಿತ್ತು. ಆ ಚುನಾವಣೆಯಲ್ಲಿ ಜೆಡಿಎಸ್ ಮುಖಂಡರು ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೊಯಿಲಿ ಅವರ ಪರ ಮನಸಾರೆ ಕೆಲಸ ಮಾಡಲಿಲ್ಲ ಎನ್ನುವ ಆರೋಪಗಳಿವೆ.  1996ರ ಲೋಕಸಭೆ ಚುನಾವಣೆಯಲ್ಲಿ ಜನತಾದಳದಿಂದ ಆರ್.ಎಲ್.ಜಾಲಪ್ಪ ನಂತರ 1998ರ ಚುನಾವಣೆಯಲ್ಲಿ ಕಾಂಗ್ರೆಸ್ ಸೇರಿ ಗೆಲುವು ದಾಖಲಿಸಿದರು. ಅಲ್ಲಿಂದ ಇಲ್ಲಿಯವರೆಗೆ ಜನತಾದಳ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿಲ್ಲ.

ವರಿಷ್ಠರದ್ದು ಏಕಪಕ್ಷೀಯ ತೀರ್ಮಾನ 

ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಮುನ್ನ ಜೆಡಿಎಸ್‌ ವರಿಷ್ಠರು ಅಲ್ಪಸಂಖ್ಯಾತರ ನಾಯಕರೊಂದಿಗೆ ಚರ್ಚೆ ನಡೆಸಿಲ್ಲ ಒಂದು ಮಾತೂ ಕೇಳಿಲ್ಲ. ಇನ್ನು ಜೆಡಿಎಸ್‌ ಜೊತೆ ಮುಂದುವರಿಯುವುದರಲ್ಲಿ ಅರ್ಥವಿಲ್ಲ. ಹೀಗಾಗಿ ಜೆಡಿಎಸ್‌ ರಾಜ್ಯ ಹಿರಿಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ.  ಜೆಡಿಎಸ್‌ ಜಾತ್ಯತೀತ ಪಕ್ಷವಾಗಿದ್ದರಿಂದ ನಾವೆಲ್ಲಾ ಈವರೆಗೆ ಕೆಲಸ ಮಾಡಿಕೊಂಡು ಬಂದಿದ್ದೆವು. ಚುನಾವಣೆಯಲ್ಲಿ ಪರಿಶ್ರಮ ಹಾಕಿದ್ದೆವು. ಈಗ ಕೋಮುವಾದಿ ‌ಬಿಜೆಪಿಗೆ ಬೆಂಬಲ ನೀಡಿರುವುದು ನೆಮ್ಮರಲ್ಲರಿಗೂ ನೋವು ತಂದಿದೆ. ಕೋಮುವಾದಿ ಪಕ್ಷದ ಜೊತೆ ನಾವು ಹೇಗೆ ಇರಲು ಸಾಧ್ಯ? ಜೆಡಿಎಸ್ ಪಕ್ಷದ ರಾಜ್ಯ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ನನಗೆ ಕಾಲೇಜು ದಿನಗಳಿಂದಲೂ ಪರಿಚಯ. ಹೀಗಾಗಿ ನನ್ನ ಮೇಲೆ ಅವರಿಗೆ ವಿಶ್ವಾಸ ಹೆಚ್ಚು. ನನಗೆ ಪಕ್ಷದ ರಾಜ್ಯ ಹಿರಿಯ ಉಪಾಧ್ಯಕ್ಷ ಸ್ಥಾನ ನೀಡಿದ್ದೇ ಅವರು. ನಾನು ಹುಟ್ಟಿನಿಂದಲೂ ಕಾಂಗ್ರೆಸ್‌ ಜೊತೆ ಇದ್ದವನು. ಮುಂದೆ ಏನಾಗುತ್ತದೆ ನೋಡೋಣ. –ಕೆ.ಎಂ.ಜಮೀರ್‌ ಅಹಮ್ಮದ್‌ ಅಂಜುಮನ್ ಎ ಇಸ್ಲಾಮಿಯಾ ಸಂಸ್ಥೆ ಅಧ್ಯಕ್ಷ ಕೋಲಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.