
ತುಮಕೂರು: ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧಗಳ ತಡೆ ಕಾಯ್ದೆ ಜಾರಿಗೆ ವಿರೋಧಿಸಿ ಬಿಜೆಪಿ ಮುಖಂಡರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ಮಸೂದೆಗೆ ರಾಜ್ಯಪಾಲರು ಸಹಿ ಮಾಡಬಾರದು ಎಂದು ಒತ್ತಾಯಿಸಿದರು.
ಈ ಕಾಯ್ದೆಯು ಸಂವಿಧಾನಕ್ಕೆ ವಿರುದ್ಧವಾಗಿದ್ದು, ನಾಗರಿಕರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯಾಗಲಿದೆ. ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನದಡಿ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಸರ್ಕಾರ ಕಿತ್ತುಕೊಳ್ಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದ್ವೇಷ ಭಾಷಣ ತಡೆ ಕಾಯ್ದೆ ಜಾರಿಗೆ ತಂದು ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಪ್ರಯತ್ನ ನಡೆದಿದೆ. ಸರ್ಕಾರದ ನೀತಿಗಳನ್ನು ಟೀಕಿಸುವುದು, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು, ಸತ್ಯ ಹೇಳುವುದನ್ನೂ ಸಹ ದ್ವೇಷವೆಂದೇ ಪರಿಗಣಿಸುವ ಅಪಾಯವಿದೆ. ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನವಾಗಿದೆ ಎಂದು ಆರೋಪಿಸಿದರು.
ಪೊಲೀಸರು, ಸರ್ಕಾರಕ್ಕೆ ನಿರಂಕುಶ ಅಧಿಕಾರ ನೀಡುತ್ತದೆ. ಕಾಯ್ದೆ ಪ್ರಕಾರ ಆರೋಪಿಗಳಿಗೆ ಜಾಮೀನು ಸಿಗುವುದಿಲ್ಲ. ಜನಸಾಮಾನ್ಯರನ್ನು ಅಪರಾಧಿಗಳಾಗಿ ಮಾಡುವ ಕೀಳು ಮಟ್ಟದ ಕಾಯ್ದೆಯಾಗಿದೆ. ಪ್ರತಿಬಂಧಕ ಕ್ರಮಗಳನ್ನು ಸಹ ಉಲ್ಲೇಖಿಸಲಾಗಿದೆ. ಪೊಲೀಸರು, ಅಧಿಕಾರಿಗಳು ಸಂಭಾವ್ಯ ಅಪರಾಧ ಎಂದು ಭಾವಿಸಿ ಮುಂಚಿತವಾಗಿ ಕ್ರಮ ಕೈಗೊಳ್ಳಬಹುದು. ಇದರಿಂದ ಪ್ರತಿಭಟನೆ ಅಥವಾ ಸಾಮಾಜಿಕ ಚಳವಳಿ ತಡೆಯುವ ಉದ್ದೇಶವಿದೆ. ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು, ಸಾಮಾಜಿಕ ಮಾಧ್ಯಮ ಬಳಸುವವರು ಹೆಚ್ಚು ತೊಂದರೆಗೆ ಸಿಲುಕುತ್ತಾರೆ ಎಂದು ಹೇಳಿದರು.
ಅನ್ಯಾಯ, ಸರ್ಕಾರದ ತಪ್ಪುಗಳ ಬಗ್ಗೆ ಮಾತನಾಡಿದರೆ ಭಾವನಾತ್ಮಕ ಹಾನಿ ಎಂದು ಬಂಧಿಸಲು ಪೊಲೀಸರಿಗೆ ಅಧಿಕಾರ ನೀಡುತ್ತದೆ. ಪತ್ರಕರ್ತರ ತನಿಖಾ ವರದಿಗಳು ಸಹ ತೂಗುಗತ್ತಿ ಎದುರಿಸಬೇಕಾಗುತ್ತದೆ. ಸಾಮಾಜಿಕ ಸಾಮರಸ್ಯದ ಹೆಸರಿನಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ನಿರ್ಬಂಧಿಸಿ ಪ್ರಜಾಪ್ರಭುತ್ವ ದುರ್ಬಲಗೊಳಿಸಲಾಗುತ್ತದೆ. ಹಾಗಾಗಿ ಈ ಕಾಯ್ದೆ ಜಾರಿಯಾಗಬಾರದು ಎಂದು ಆಗ್ರಹಿಸಿದರು.
ಮುಖಂಡರಾದ ಎಚ್.ಎಸ್.ರವಿಶಂಕರ್, ಬ್ಯಾಟರಂಗೇಗೌಡ, ಎಚ್.ಎಂ.ರವೀಶಯ್ಯ, ಧನುಷ್, ನವಚೇತನ್, ಎ.ಎಚ್.ಆಂಜನಪ್ಪ, ಕೆ.ವೇದಮೂರ್ತಿ, ಸುಮಿತ್ರಮ್ಮ, ಸತ್ಯಮಂಗಲ ಜಗದೀಶ್, ರಾಜಶೇಖರ್, ಜೆ.ಜಗದೀಶ್, ಮರಿತಿಮ್ಮಯ್ಯ ಇತರರು ಭಾಗವಹಿಸಿದ್ದರು.
ಹೋರಾಟದ ಎಚ್ಚರಿಕೆ
ನಾಗರಿಕರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುವ ವಾಕ್ ಸ್ವಾತಂತ್ರ್ಯ ದಮನ ಮಾಡುವ ದ್ವೇಷ ಪ್ರತಿಬಂಧಕ ವಿಧೇಯಕವನ್ನು ಬೆಳಗಾವಿ ಅಧಿವೇಶನದಲ್ಲೇ ವಿರೋಧಿಸಲಾಗಿತ್ತು. ಬಿಜೆಪಿ ವಿರೋಧದ ನಡುವೆಯೇ ಕಾಂಗ್ರೆಸ್ ಸರ್ಕಾರ ಮಸೂದೆಗೆ ಒಪ್ಪಿಗೆ ನೀಡಿದೆ. ಇದರ ಅನುಷ್ಠಾನಕ್ಕೆ ಬಿಡುವುದಿಲ್ಲ ಹೋರಾಟ ಮುಂದುವರಿಸಲಾಗುವುದು ಎಂದು ಶಾಸಕ ಬಿ.ಸುರೇಶ್ಗೌಡ ಎಚ್ಚರಿಸಿದರು. ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನ. ಪೊಲೀಸರು ಸರ್ಕಾರಕ್ಕೆ ನಿರಂಕುಶ ಅಧಿಕಾರ ನೀಡುತ್ತದೆ. ಜನರ ಧ್ವನಿಯನ್ನು ನಾಶ ಮಾಡುವ ಪ್ರಯತ್ನವಾಗಿದೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.