ತುಮಕೂರು: ಬಿಜೆಪಿಯಿಂದ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕಾರಿಣಿಯಲ್ಲಿ ರಾಜ್ಯ ಸರ್ಕಾರದ ಆಡಳಿತದ ವಿರುದ್ಧ ಖಂಡನಾ ನಿರ್ಣಯ ಮಂಡಿಸಲಾಯಿತು.
‘ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ, ಹಗರಣದಲ್ಲಿ ಮುಳುಗಿದೆ. ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಬಳಕೆ ಮಾಡಬೇಕಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ₹187 ಕೊಟಿ ಹಣ ಬೇನಾಮಿ ಖಾತೆಗಳಿಗೆ ವರ್ಗಾವಣೆಯಾಗಿದೆ. ಬಡವರ ದುಡ್ಡು ಲೂಟಿ ಮಾಡಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಸುಮಾರು ₹5 ಸಾವಿರ ಕೋಟಿ ಹಗರಣ ನಡೆದಿದೆ’ ಎಂದು ಶಾಸಕ ಬಿ.ಸುರೇಶ್ಗೌಡ ಆರೋಪಿಸಿದರು.
ಪರಿಶಿಷ್ಟ ಸಮುದಾಯಗಳಿಗೆ ಮೀಸಲಿಟ್ಟಿದ್ದ ₹25 ಸಾವಿರ ಕೋಟಿಯನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ದಲಿತ ವಿರೋಧಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಾಜಿ ಸಂಸದ ಜಿ.ಎಸ್.ಬಸವರಾಜು, ‘ನಮ್ಮ ಜಿಲ್ಲೆ ವ್ಯಾಪ್ತಿಯ ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ನಮ್ಮಲ್ಲಿರುವ ಒಗ್ಗಟ್ಟು, ಹೋರಾಟ, ಬದ್ಧತೆ ಗೆಲುವಿಗೆ ಕಾರಣವಾಗಿದೆ. ಮುಂದಿನ ಚುನಾವಣೆಗಳಲ್ಲೂ ಇದೇ ರೀತಿ ಕೆಲಸ ಮಾಡಬೇಕು’ ಎಂದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್, ‘ಜುಲೈ 30ರ ವರೆಗೆ ಮಂಡಲ ಕಾರ್ಯಕಾರಿಣಿ ನಡೆಸಬೇಕು. ಆ. 15ರಿಂದ 30ರ ವರೆಗೆ ‘ಬೂತ್ ಚಲೊ’ ಕಾರ್ಯಕ್ರಮ ನಡೆಯಲಿದೆ’ ಎಂದು ತಿಳಿಸಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್, ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟರಂಗೇಗೌಡ, ಪದಾಧಿಕಾರಿಗಳಾದ ಎಸ್.ಶಿವಪ್ರಸಾದ್, ಸಾಗರನಹಳ್ಳಿ ವಿಜಯಕುಮಾರ್, ಎಸ್.ಡಿ.ದಿಲೀಪ್ಕುಮಾರ್, ವೆಂಕಟೇಶ್, ಆರ್.ಅಂಬಿಕಾ, ಎಚ್.ಟಿ.ಭೈರಪ್ಪ, ಅನಿಲ್ಕುಮಾರ್, ವೈ.ಎಚ್.ಹುಚ್ಚಯ್ಯ, ಶಂಕರಪ್ಪ, ಗಂಗರಾಜು, ಸಂದೀಪ್ಗೌಡ, ಹಾಲೇಗೌಡ, ಎಚ್.ಎಂ.ರವೀಶಯ್ಯ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.