ADVERTISEMENT

ಅನಾರೋಗ್ಯದ ಕಾರಣ ಮಾಧುಸ್ವಾಮಿ ಪ್ರಚಾರಕ್ಕೆ ಬಂದಿಲ್ಲ: ಬಿ.ವೈ.ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2020, 8:41 IST
Last Updated 24 ಅಕ್ಟೋಬರ್ 2020, 8:41 IST
ಬಿ.ವೈ.ವಿಜಯೇಂದ್ರ
ಬಿ.ವೈ.ವಿಜಯೇಂದ್ರ    

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಕೊರೊನಾ ಕಾರಣದಿಂದ ಎರಡು ಬಾರಿ ಆಸ್ಪತ್ರೆ ದಾಖಲಾಗಿದ್ದರು. ಆರೋಗ್ಯ ಕೈಕೊಟ್ಟ ಕಾರಣ ಚುನಾವಣೆಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ವಿಚಾರದಲ್ಲಿ ನಾಟಕವಾಡುವ ಪ್ರಶ್ನೆ ಇಲ್ಲ. ಪ್ರತಿಪಕ್ಷಗಳ ಹೇಳಿಕೆಗಳು ಅವರ ಹತಾಶೆ ಎದ್ದು ತೋರುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಇಲ್ಲಿನ ಸಿದ್ಧಗಂಗಾಮಠಕ್ಕೆ ಶನಿವಾರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ನಮ್ಮ ಪಕ್ಷದವರು ಸೇರಿದಂತೆ ಯಾರೂ ಕೂಡ ನಿರೀಕ್ಷೆ ಮಾಡದಷ್ಟು ರೀತಿಯಲ್ಲಿ ಶಿರಾ ಕ್ಷೇತ್ರದಲ್ಲಿ ಬಿಜೆಪಿ ಶಕ್ತಿ ವೃದ್ಧಿಸಿಕೊಂಡಿದೆ. ಹಾಗಾಗಿ ಇತಿಹಾಸಪುಟಗಳಲ್ಲಿ ಬರೆದಿಡುವ ಗೆಲುವನ್ನು ಬಿಜೆಪಿ ಪಡೆಯಲಿದೆ ಎಂದರು.

ADVERTISEMENT

ಪಕ್ಷ ವಹಿಸಿರುವ ಜವಾಬ್ದಾರಿಯನ್ನು ನಿಭಾಯಿಸುವೆ. ಆಕಾಂಕ್ಷಿಗಳಾದ ಬಿ.ಕೆ.ಮಂಜುನಾಥ್, ಎಸ್.ಆರ್.ಗೌಡ ಸೇರಿದಂತೆ ಎಲ್ಲರೂ ಒಗ್ಗೂಡಿ ಚುನಾವಣೆ ಎದುರಿಸುತ್ತಿದ್ದೇವೆ. ಪಕ್ಷ ಸಾಧಿಸುವುದು ನಿಶ್ಚಿತ ಎಂದು ಹೇಳಿದರು.

ಪಕ್ಷದಲ್ಲಿ ಯಾವ ಭಿನ್ನಮತವು ಇಲ್ಲ. ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಅಶ್ವತ್ಥನಾರಾಯಣ, ಸಂಸದ ನಾರಾಯಣಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ಮುಖಂಡರು ಪ್ರಚಾರದಲ್ಲಿ ತೊಡಗಿದ್ದಾರೆ. ಯುವ ಮೋರ್ಚಾ ಸಹ ದೊಡ್ಡ ಬಲ ನೀಡಿದೆ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದರಿಸುತ್ತಿದ್ದೇವೆ ಎಂದು ತಿಳಿಸಿದರು.

ಸ್ಫೂರ್ತಿ, ಶಕ್ತಿ ಕೊಡುವ ಪುಣ್ಯಕ್ಷೇತ್ರ ಸಿದ್ಧಗಂಗೆ. ಈ ಭಾಗಕ್ಕೆ ಬಂದಾಗಲೆಲ್ಲ ಮಠಕ್ಕೆ ಭೇಟಿ ಕೊಡುತ್ತೇನೆ. ರಾಜಕಾರಣಕ್ಕೂ ಮಠದ ಭೇಟಿಗೂ ಸಂಬಂಧ ಇಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.