ಪ್ರಜಾವಾಣಿ ವಾರ್ತೆ
ತುಮಕೂರು: ನಗರದ ಬಸವೇಶ್ವರ ರಸ್ತೆಯಲ್ಲಿರುವ ರೇಣುಕಾ ವಿದ್ಯಾಪೀಠದಲ್ಲಿ 100 ಹಾಸಿಗೆಯುಳ್ಳ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಲು ಸಿದ್ಧತೆ ನಡೆಸಲಾಗಿದೆ.
ಹಾಸಿಗೆ ವ್ಯವಸ್ಥೆಯನ್ನು ರೇಣುಕಾ ವಿದ್ಯಾಪೀಠದಿಂದ ಮಾಡಲಾಗುತ್ತದೆ. ಉಳಿದಂತೆ ಔಷಧಿ, ವೈದ್ಯರು, ನರ್ಸ್ಗಳ ವ್ಯವಸ್ಥೆಯನ್ನು ಜಿಲ್ಲಾ ಆಡಳಿತ ಮಾಡಿಕೊಡಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದರು. ಶಾಲೆಯ ಕೊಠಡಿಗಳನ್ನು ವೀಕ್ಷಿಸಿ ಕೋವಿಡ್ ಐಸೋಲೇಷನ್ ವಾರ್ಡ್ ಸ್ಥಾಪಿಸಲು ಸೂಕ್ತವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿ.ಪಂ ಸಿಇಓ ಕೆ.ವಿದ್ಯಾಕುಮಾರಿ, ಡಿಎಚ್ಓ ಡಾ.ನಾಗೇಂದ್ರಪ್ಪ ಜತೆಯಲ್ಲಿ ಇದ್ದರು.
ತುಮಕೂರು ನಗರ ವೀರಶೈವ ಸಮಾಜದ ಅಧ್ಯಕ್ಷ ಟಿ.ಬಿ.ಶೇಖರ್ ಮಾತನಾಡಿ, ‘ಈ ಹಿಂದೆ ಕೋವಿಡ್ ಸಂದರ್ಭದಲ್ಲಿ 25 ಸಾವಿರಕ್ಕೂ ಅಧಿಕ ಜನರಿಗೆ ಅನ್ನದಾನದ ವ್ಯವಸ್ಥೆ ಮಾಡಲಾಗಿತ್ತು. ಅದೇ ರೀತಿ ಕೋವಿಡ್ನಿಂದ ನರಳುತ್ತಿರುವ ರೋಗಿಗಳಿಗೆ ಸೂಕ್ತ ಕಾಲಕ್ಕೆ ಚಿಕಿತ್ಸೆ ದೊರೆಯಲೆಂಬ ಉದ್ದೇಶದಿಂದ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗುತ್ತಿದೆ’ ಎಂದು ಹೇಳಿದರು.
ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಲು ಮಾಜಿ ಸಚಿವ
ಸೊಗಡು ಶಿವಣ್ಣ ಪ್ರೇರಣೆ ಎಂದು ತಿಳಿಸಿದರು. ಮುಖಂಡರಾದ ಸೊಗಡು ಶಿವಣ್ಣ, ರಮೇಶ್ಬಾಬು, ಚಂದ್ರಮೌಳಿ, ಶಿವಕುಮಾರ್, ಪ್ರಸನ್ನ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.