ADVERTISEMENT

ಅರಸು ನಿಗಮದ ಕಚೇರಿಗೆ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು

ಸುದ್ದಿಗೋಷ್ಠಿಯಲ್ಲಿ ರಘು ಕೌಟಿಲ್ಯ

​ಪ್ರಜಾವಾಣಿ ವಾರ್ತೆ
Published 5 ಜನವರಿ 2021, 8:13 IST
Last Updated 5 ಜನವರಿ 2021, 8:13 IST
ರಘು ಕೌಟಿಲ್ಯ
ರಘು ಕೌಟಿಲ್ಯ   

ತುಮಕೂರು: ಆಡಳಿತದಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಗಳಿಗೆ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಸುವ ಮೂಲಕ ‌ಕೇಂದ್ರೀಕೃತ ವ್ಯವಸ್ಥೆ ಜಾರಿಗೊಳಿಸಲು ಆಲೋಚಿಸಲಾಗುವುದು ಎಂದು ನಿಗಮದ ಅಧ್ಯಕ್ಷ ಆರ್‌. ರಘು ಕೌಟಿಲ್ಯ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಯೋಜನೆಗಳಿಗೆ ಹೊಸ ಸ್ಪರ್ಶ ನೀಡಲು ಮತ್ತು ಯೋಜನೆಗಳನ್ನು ಇನ್ನಷ್ಟು ವಿಸ್ತರಿಸುವ ಅಲೋಚನೆ ಇದೆ’ ಎಂದರು.

ನಿಗಮದ ಸೌಲಭ್ಯಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಪಾರದರ್ಶಕತೆ ತರಲಾಗುವುದು. ಕೊರೊನಾ ಕಾರಣದಿಂದ ಈ ಹಿಂದಿನ ವರ್ಷದಲ್ಲಿ ಗುರಿ ತಲುಪಲು ಸಾಧ್ಯವಾಗಿಲ್ಲ. ಪ್ರಸಕ್ತ ವರ್ಷ ಹೆಚ್ಚಿನ ಫಲಾನುಭವಿಗಳನ್ನು ತಲುಪಲಾಗುವುದು ಎಂದು ಹೇಳಿದರು.

ADVERTISEMENT

ಕೃಷಿ ಮತ್ತು ದೇಸಿ ಕೈಗಾರಿಕೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ನಿಗಮದ ಮೂಲಕ ದೇಸಿ ಉತ್ಪನ್ನಗಳಿಗೆ ಮಾರುಕಟ್ಟೆ ಸೃಷ್ಟಿಸಬೇಕು ಮತ್ತು ಬೆಳೆಸಬೇಕು ಎನ್ನುವ ಆಲೋಚನೆ ಇದೆ. ರೈತರು– ಬೆಳೆಗಾರರರ ಬದುಕನ್ನು ಹಸನು ಮಾಡಬೇಕು ಎನ್ನುವ ದೃಷ್ಟಿಯಿಂದ ನಿಗಮವು ಕೆಲಸ ಮಾಡುತ್ತದೆ ಎಂದು ವಿವರಿಸಿದರು.

ನಿಗಮಕ್ಕೆ ಪ್ರಸಕ್ತ ವರ್ಷ ₹ 80 ಕೋಟಿ ಅನುದಾನ ಬಂದಿದೆ. ಆದರೆ, 2019–2000ನೇ ಸಾಲಿನ ಕೊರತೆಗಳನ್ನು ಈ ಅನುದಾನದಲ್ಲಿ ನೀಗಿಸಿದ್ದೇವೆ. ಎಂದು ಮಾಹಿತಿ ನೀಡಿದರು.

ಶಾಸಕ ಜಿ.ಬಿ. ಜ್ಯೋತಿಗಣೇಶ್, ಕರ್ನಾಟಕ ತೆಂಗು ನಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ಕೆ. ಮಂಜುನಾಥ್, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಭಕ್ತ ಕುಚೇಲ ಗೋಷ್ಠಿಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.