
ತುಮಕೂರು: ಬಯಲು ಸೀಮೆಯ ಏಳು ಜಿಲ್ಲೆಗಳ ಜನರ ದಾಹ ನೀಗಿಸುವ ಎತ್ತಿನಹೊಳೆ ನೀರಾವರಿ ಯೋಜನೆ ಕೊನೆಯ ಹಂತಕ್ಕೆ ಬಂದಿರುವ ಹೊತ್ತಿನಲ್ಲೇ ಕೇಂದ್ರ ಸರ್ಕಾರ ಅಡ್ಡಿಪಡಿಸುತ್ತಿದೆ. ರಾಜ್ಯದ ವಿರುದ್ಧ ಮಲತಾಯಿ ಧೋರಣೆ ಮುಂದುವರಿಸಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ ಇಲ್ಲಿ ಗುರುವಾರ ಆಕ್ರೋಶ ವ್ಯಕ್ತಪಡಿಸಿದರು.
2012ರಲ್ಲಿ ಆರಂಭವಾದ ಎತ್ತಿನಹೊಳೆ ಯೋಜನೆಯ ಶೇ 90ರಷ್ಟು ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ. ಇಂತಹ ಸಮಯದಲ್ಲಿ ಕೇಂದ್ರ ಅಡ್ಡಿಪಡಿಸುತ್ತಿದ್ದು, ಈ ಬಗ್ಗೆ ಕೇಂದ್ರ ಜಲಸಂಪನ್ಮೂಲ ಸಚಿವರ ಜತೆಗೆ ಚರ್ಚಿಸಲು ಡಿ. 13–14ರಂದು ರಾಜ್ಯ ಸರ್ಕಾರ ದೆಹಲಿಗೆ ನಿಯೋಗ ಕೊಂಡೊಯ್ಯಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಯೋಜನೆಗೆ ನಿಗದಿಗಿಂತ ಹೆಚ್ಚು ಭೂಮಿ ಬಳಕೆ ಮಾಡಲಾಗಿದೆ. ಹಸಿರು ನ್ಯಾಯ ಪೀಠದ ಅನುಮತಿ ಪಡೆದಿಲ್ಲ, ಅರಣ್ಯ ಪ್ರದೇಶ ಬಳಕೆ ಮಾಡಿಕೊಳ್ಳಲಾಗಿದೆ, ಇನ್ನಿತರ ಅನಗತ್ಯ ತಕರಾರು ತೆಗೆದು ಕಾಮಗಾರಿ ವಿಳಂಬವಾಗುವಂತೆ ಮಾಡುತ್ತಿದೆ. ಕುಡಿಯುವ ನೀರಿನ ಯೋಜನೆಗೆ ಸಹಕಾರ ನೀಡುವುದು ಬಿಟ್ಟು ಅಡ್ಡಿಪಡಿಸುತ್ತಿದೆ. ಈ ಬಗ್ಗೆ ರಾಜ್ಯದ ಸಂಸದರು ಪಕ್ಷಾತೀತವಾಗಿ ಧ್ವನಿಯೆತ್ತಿ ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯಲ್ಲಿ ಹೇಮಾವತಿ, ಎತ್ತಿನಹೊಳೆ, ಭದ್ರ ಮೇಲ್ದಂಡೆ ಯೋಜನೆ ಜಾರಿಯಲ್ಲಿದೆ. ಭದ್ರ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ನಲ್ಲಿ ₹5,300 ಕೋಟಿ ಘೋಷಣೆ ಮಾಡಿದ್ದರೂ ಈವರೆಗೂ ಹಣ ಬಿಡುಗಡೆ ಮಾಡಿಲ್ಲ. ಎತ್ತಿನಹೊಳೆ ಯೋಜನೆ ಮೊತ್ತ ಹೆಚ್ಚುತ್ತಲೇ ಸಾಗಿದ್ದು, ಈಗ ₹23,252 ಕೋಟಿಗೆ ತಲುಪಿದೆ. ಈ ಯೋಜನೆಗೆ ಹಣ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ ನಂತರ ನೆರವು ನೀಡುವ ಬದಲು ಇಲ್ಲಸಲ್ಲದ ತಕರಾರು ಆರಂಭಿಸಿದೆ. ಕೇಂದ್ರದಿಂದ ತನಿಖಾ ಸಂಸ್ಥೆಗಳನ್ನು ಕಳುಹಿಸಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದರು.
ಈ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಕರೆದಿದ್ದ ಸಭೆಗೆ ಬಿಜೆಪಿ ಸಂಸದರು ಗೈರಾಗಿದ್ದರು. ಇದೇ ಧೋರಣೆ ಮುಂದುವರಿದರೆ ಕೇಂದ್ರ ಸರ್ಕಾರ, ಬಿಜೆಪಿ ಸಂಸದರ ವಿರುದ್ಧ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ರಾಜಣ್ಣ, ‘ಕೇಂದ್ರ ಸರ್ಕಾರ ಪರಿಸರ ಇಲಾಖೆಯನ್ನು ಮುಂದಿಟ್ಟುಕೊಂಡು ಯೋಜನೆಗೆ ತಡೆಯೊಡ್ಡುವ ಕೆಲಸ ಮಾಡುತ್ತಿದೆ. ಹೋರಾಟಕ್ಕೆ ಅವಕಾಶ ನೀಡದೆ ಕೆಲಸ ಮುಂದುವರಿಸಲು ನೆರವಾಗಬೇಕು’ ಎಂದು ಒತ್ತಾಯಿಸಿದರು.
ಮುಖಂಡರಾದ ರೇವಣ್ಣ ಸಿದ್ದಯ್ಯ, ಅಶೋಕ್ ರಾಜವರ್ಧನ್, ರಾಚಪ್ಪ, ಕೆ.ಆರ್.ವೆಂಕಟೇಶ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.