ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಪುರಸಭೆ ಹಾಗೂ ಹುಳಿಯಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಡಿ ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರ ಮತ್ತು ಅಪೂರ್ಣ ಕಾಮಗಾರಿಗಳ ಕುರಿತು ವಿಚಾರಣೆ ನಡೆಸಲು ಪೌರಾಡಳಿತ ಮತ್ತು ಹಜ್ ಸಚಿವಾಲಯ ಬುಧವಾರ ಸಭೆ ಕರೆದಿದೆ.
ವಿಧಾನ ಪರಿಷತ್ ಸದಸ್ಯರಾದ ರಮೇಶ್ ಬಾಬು ಅವರು ಅಧಿವೇಶನದಲ್ಲಿ ಚಿಕ್ಕನಾಯಕನಹಳ್ಳಿ ಮತ್ತು ಹುಳಿಯಾರು ಪಟ್ಟಣಗಳ ಕೆಯುಡಬ್ಲ್ಯೂಎಸ್ ಹಾಗೂ ಡಿಬಿ ಕಾಮಗಾರಿಗಳ ಲೋಪದೋಷಗಳನ್ನು ಗಮನಕ್ಕೆ ತಂದಿದ್ದರು. ಎಸ್ಎಫ್ಸಿ ನಗರೋತ್ಥಾನ, ಎಸ್ಬಿಎಂ ಹಾಗೂ 15ನೇ ಹಣಕಾಸು ಯೋಜನೆಯ ಅನುದಾನ ಬಳಕೆಯಲ್ಲಿ ದೊಡ್ಡಮಟ್ಟದ ಅವ್ಯವಹಾರ ನಡೆದಿದ್ದು ಕಾಮಗಾರಿಗಳು ಅರ್ಧಕ್ಕೆ ನಿಂತಿವೆ ಎಂದು ಆರೋಪಿಸಿದ್ದರು. ತಪ್ಪಿತಸ್ಥ ಅಧಿಕಾರಿಗಳ ಅಮಾನತಿಗೆ ಒತ್ತಾಯಿಸಿದ್ದರು.
ಸರ್ಕಾರವು ಕಳೆದ ತಿಂಗಳೇ ಎರಡೂ ಪೌರಸಂಸ್ಥೆಗಳ ಮುಖ್ಯಾಧಿಕಾರಿಗೆ ನೋಟಿಸ್ ಜಾರಿ ಮಾಡಿತ್ತು. ನೋಟಿಸ್ ತಲುಪಿದ ಮೂರು ದಿನಗಳ ಒಳಗಾಗಿ ಕಾಮಗಾರಿಗಳಿಗೆ ಸಂಬಂಧಿಸಿದ ಪೂರಕ ದಾಖಲೆ ಸಲ್ಲಿಸುವಂತೆ ನಿರ್ದೇಶಿಸಿತ್ತು. ದಾಖಲೆ ಸಲ್ಲಿಸಲು ವಿಫಲರಾದಲ್ಲಿ ಶಿಸ್ತು ಕ್ರಮ ಜರುಗಿಸುವುದಾಗಿ ಎಚ್ಚರಿಸಲಾಗಿತ್ತು.
ಸರ್ಕಾರದ ಆದೇಶದಂತೆ ಅಧಿಕಾರಿಗಳು ಸಲ್ಲಿಸಿರುವ ದಾಖಲೆಗಳ ಪರಿಶೀಲನೆ ಹಾಗೂ ರಮೇಶ್ ಬಾಬು ಅವರು ನೀಡಿದ ದೂರಿನ ಕುರಿತು ಚರ್ಚಿಸಲು ಇಂದು ಸಚಿವಾಲಯದಲ್ಲಿ ಸಭೆ ನಡೆಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.