
ಚಿಕ್ಕನಾಯಕನಹಳ್ಳಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ನಾಲ್ಕು ಕಾಯ್ದೆಗಳನ್ನು ತಕ್ಷಣವೇ ಹಿಂಪಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ದೇಶದಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಅಂಗನವಾಡಿ ನೌಕರರ ಸಂಘದ ಕಾರ್ಯಾಧ್ಯಕ್ಷೆ ಸುನಂದಾ ಬಿ.ಕೆ. ಹೇಳಿದರು.
ಪಟ್ಟಣದಲ್ಲಿ ಗುರುವಾರ ಸಿಐಟಿಯು, ಎಐಟಿಯುಸಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಮಾ ಕಾಯ್ದೆ ತಿದ್ದುಪಡಿ ಹಾಗೂ ಲೇಬರ್ ಕೋಡ್ ಅನ್ನು ಸಂಪೂರ್ಣವಾಗಿ ರದ್ದುಪಡಿಸಬೇಕು. ವಿದ್ಯುತ್ ಕ್ಷೇತ್ರದ ಖಾಸಗೀಕರಣ ಪ್ರಕ್ರಿಯೆ ಸ್ಥಗಿತಗೊಳಿಸಬೇಕು. ನರೇಗಾ ಯೋಜನೆಯನ್ನು ಸಮರ್ಪಕವಾಗಿ ಮರುಸ್ಥಾಪಿಸಬೇಕು. ಕಾರ್ಮಿಕರಿಗೆ ಮಾಸಿಕ ಕನಿಷ್ಠ ಕೂಲಿಯನ್ನು 41,000 ಕ್ಕೆ ಏರಿಸಬೇಕು ಹಾಗೂ ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕವಾಗಿ ಕನಿಷ್ಠ ಬೆಂಬಲ ಬೆಲೆ ಖಾತರಿಪಡಿಸಬೇಕು ಎಂದು ಹೇಳಿದರು.
ಗ್ರಾಮ ಪಂಚಾಯತ್ ನೌಕರರ ಸಂಘದ ಅಧ್ಯಕ್ಷ ಶಂಕರ್ ಮಾತನಾಡಿ, ಈ ಸಾರ್ವತ್ರಿಕ ಮುಷ್ಕರಕ್ಕೆ ದೇಶದಾದ್ಯಂತ ಸ್ವಯಂಪ್ರೇರಿತ ಬೆಂಬಲ ವ್ಯಕ್ತವಾಗಿದೆ. ಸರ್ಕಾರವು ಕಾರ್ಮಿಕರ ಮತ್ತು ರೈತರ ನ್ಯಾಯಸಮ್ಮತ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದು ಅನಿವಾರ್ಯ ಎಂದು ತಿಳಿಸಿದರು.
ಪಟ್ಟಣದ ಗುರುಭವನದಿಂದ ಆರಂಭವಾದ ಪ್ರತಿಭಟನ ಮೆರವಣಿಗೆ ನೆಹರೂ ವೃತ್ತದ ಮೂಲಕ ಸಾಗಿ ತಾಲ್ಲೂಕು ಆಡಳಿತ ಸೌಧದವರೆಗೆ ತಲುಪಿತು. ನೂರಾರು ಕಾರ್ಮಿಕರು ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತ ಮೆರವಣಿಗೆಯುದ್ದಕ್ಕೂ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಪುಷ್ಪವತಮ್ಮ, ನಾಗಸುಂದರಮ್ಮ, ಲತಾ, ಭಾಗ್ಯ, ತುಳಸಿ, ದೇವಿಕಾ, ರಾಜಮ್ಮ, ಕವಿತಾ, ಈಶ್ವರ ಸೇರಿದಂತೆ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಕ್ಷೇತ್ರದ ಕಾರ್ಮಿಕರು ಸಕ್ರಿಯವಾಗಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.