ADVERTISEMENT

ತುಮಕೂರು: ‘ಮಕ್ಕಳಿಗೂ ಕಾನೂನು ಅರಿವಿರಬೇಕು’

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2021, 7:18 IST
Last Updated 8 ಅಕ್ಟೋಬರ್ 2021, 7:18 IST
ತುಮಕೂರಿನಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎಸ್.ಶ್ರೀಧರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ರಮೇಶ್, ನಿರೂಪಣಾಧಿಕಾರಿ ಶಿವಕುಮಾರ, ಪವಿತ್ರಾ ಇದ್ದರು
ತುಮಕೂರಿನಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎಸ್.ಶ್ರೀಧರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ರಮೇಶ್, ನಿರೂಪಣಾಧಿಕಾರಿ ಶಿವಕುಮಾರ, ಪವಿತ್ರಾ ಇದ್ದರು   

ತುಮಕೂರು: ಮಹಿಳೆಯರು, ಮಕ್ಕಳ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಕಾನೂನಿನ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಗುರುವಾರ ನಡೆದ ಕಾನೂನು ಅರಿವು ಅಭಿಯಾನ, ಪೋಕ್ಸೊ ಕಾಯ್ದೆ, ಮಾನವ ಸಾಗಣೆ, ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ಕುರಿತ ಕಾನೂನು ಅರಿವುಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪುರಾತನ ಕಾಲದಿಂದಲೂ ಮಹಿಳೆಯರಿಗೆ ವಿಶೇಷ ಸ್ಥಾನ ಮಾನಗಳನ್ನು ನೀಡಿದ್ದರೂ, ದೌರ್ಜನ್ಯಗಳು ಇನ್ನೂ ನಡೆಯುತ್ತಿವೆ. ದೌರ್ಜನ್ಯ ತಡೆಗೆ ಕಾನೂನಿನಲ್ಲಿ ಹಲವಾರುತಿದ್ದುಪಡಿ ತಂದು ಮಹಿಳೆಯರ ಘನತೆಗೆ ಅಗೌರವ ತರುವ ಅಂಶಗಳನ್ನು ತೆಗೆದುಹಾಕಿ ರಕ್ಷಣೆಗೆ ಕಾನೂನು ಬಲಪಡಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಹೇಳಿದರು.

ADVERTISEMENT

ಕೆಲಸದ ಸ್ಥಳದಲ್ಲಿ ಮಹಿಳೆ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಡಿಕಠಿಣ ಶಿಕ್ಷೆ ವಿಧಿಸಲು ಅವಕಾಶವಿದೆ. ದೌರ್ಜನ್ಯ ನಡೆದಾಗ ಮಹಿಳೆಯರು ಧೈರ್ಯದಿಂದ ದೂರುನೀಡಬೇಕು ಎಂದು ಸಲಹೆ ಮಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎಸ್.ಶ್ರೀಧರ, ‘ಕಾನೂನು ಉಲ್ಲಂಘನೆ, ಅಪರಾಧ ಕೃತ್ಯಗಳು ಹೆಚ್ಚಾಗುತ್ತಿವೆ. ಪ್ರತಿಯೊಬ್ಬರೂ ಕುಟುಂಬದ ಬಗ್ಗೆ ಕಾಳಜಿ, ಜವಾಬ್ದಾರಿ ಬೆಳೆಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ’ ಎಂದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್, ‘ಹದಿನೆಂಟು ವರ್ಷದೊಳಗಿನ ಮಕ್ಕಳಿಗೆ ಅಶ್ಲೀಲ ಚಿತ್ರ ತೋರಿಸುವುದು, ಅಶ್ಲೀಲ ಪದಬಳಕೆ ಮಾಡುವುದು, ಶಿಕ್ಷಕರುವಿದ್ಯಾರ್ಥಿಗಳ ಮೇಲೆ, ಪೋಷಕರು ಮಕ್ಕಳ ಮೇಲೆ ಮಾಡುವ ದೌರ್ಜನ್ಯ ಪ್ರಕರಣಗಳು ಸಹ ಪೋಕ್ಸೊ ಕಾಯ್ದೆ ವ್ಯಾಪ್ತಿಗೆ ಬರುತ್ತವೆ’ ಎಂದುತಿಳಿಸಿದರು.

ಕೋವಿಡ್‍ನಿಂದಾಗಿ ತಂದೆ ಕಳೆದುಕೊಂಡ ಮಕ್ಕಳು, ಗಂಡನನ್ನು ಕಳೆದುಕೊಂಡ ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ತುತ್ತಾಗುತ್ತಿದ್ದಾರೆ. ಬಡವರು, ನಿರ್ಗತಿಕ ಹೆಣ್ಣು ಮಕ್ಕಳಿಗೆ ಹಣದ ಆಮಿಷ ಒಡ್ಡಿ ಅನೈತಿಕ ಕೃತ್ಯಗಳಿಗೆ ಬಳಸಿಕೊಳ್ಳುವ ಪ್ರಕರಣಗಳು ಕಂಡು ಬರುತ್ತಿವೆ. ಇಂತಹ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳನ್ನು ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ ಶಿವಕುಮಾರ, ಪವಿತ್ರಾ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ರಮೇಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.