ಮಧುಗಿರಿ: ತಾಲ್ಲೂಕು ಚೋಳೇನಹಳ್ಳಿ ಕೆರೆಯನ್ನು ಉತ್ತಮವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
ತಾಲ್ಲೂಕಿನ ಚೋಳೇನಹಳ್ಳಿ ಕೆರೆಯಲ್ಲಿ ಬುಧವಾರ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ದೋಣಿ ವಿಹಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಚೋಳೇನಹಳ್ಳಿ ಕೆರೆಯಲ್ಲಿ ನೀರು ಕಡಿಮೆಯಾದಾಗ ಕೆರೆ ಏರಿ ಹಾಗೂ ಹೂಳನ್ನು ಎತ್ತಿಸಲಾಗುವುದು. ಈ ಕೆರೆ ನೋಡಲು ಸುಂದರವಾಗಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಈ ಕೆರೆಯಲ್ಲಿ ಶಾಶ್ವತವಾಗಿ ದೋಣಿ ವಿಹಾರದ ವ್ಯವಸ್ಥೆ ಮಾಡಿಸಲಾಗುವುದು ಎಂದು ತಿಳಿಸಿದರು.
ಚೋಳೇನಹಳ್ಳಿ ಕೆರೆ ತುಂಬಿದ ಪ್ರತಿ ವರ್ಷದಲ್ಲಿ ದಂಡಿನ ಮಾರಮ್ಮ ದೇವಿಯ ತೆಪ್ಪೋತ್ಸವ ಆಚರಿಸಲಾಗುವುದು. ಅದಕ್ಕಾಗಿ ಕೆರೆಯೊಳಗೆ ಶಾಶ್ವತವಾಗಿ ವೇದಿಕೆಗಳನ್ನು ನಿರ್ಮಿಸಲಾಗುವುದು ಎಂದರು.
ಫೆಬ್ರವರಿ 10ರ ನಂತರ ನಗರ ವ್ಯಾಪ್ತಿಯ ₹30 ಲಕ್ಷ ಆಸ್ತಿಗೆ ಬಿ- ಖಾತಾ ನೀಡಲು ಈಗಾಗಲೇ ಸರ್ಕಾರ ತೀರ್ಮಾನಿಸಿದೆ. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಬಿ- ಖಾತ ಪಡೆದರಿಗೂ ಸಾಲ, ಸೌಲಭ್ಯಗಳನ್ನು ನೀಡಬೇಕು ಎಂದು ತಿಳಿಸಿದರು.
ಮಧುಗಿರಿ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕು ಎಂದು ಈಗಾಗಲೇ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ. ಸೂಕ್ತ ಸಮಯದಲ್ಲಿ ಮಧುಗಿರಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸುತ್ತಾರೆ ಎಂದು ತಿಳಿಸಿದರು.
ಏಕಾಶಿಲಾ ಬೆಟ್ಟಕ್ಕೆ ರೋಪ್ ವೇ ಕಾಮಗಾರಿಗೆ ಶೀಘ್ರ ಚಾಲನೆ ನೀಡಲಾಗುವುದು. ಒಂದೇ ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಲೋಕಾರ್ಪಣೆಗೊಳಿಸಲಾಗುವುದು ಎಂದರು.
ಉಪವಿಭಾಗಾಧಿಕಾರಿ ಗೊಟೋರು ಶಿವಪ್ಪ, ತಹಶೀಲ್ದಾರ್ ಶಿರಿನ್ ತಾಜ್, ತಾ.ಪಂ.ಇಒ ಲಕ್ಷ್ಮಣ್, ಮಧುಗಿರಿ ವಿದ್ಯಾಸಂಸ್ಥೆ ಅಧ್ಯಕ್ಷ ಎಂ.ವಿ.ಶ್ರೀನಿವಾಸ್, ರಾಜ್ಯ ಸಹಕಾರ ಮಹಾ ಮಂಡಳ ನಿರ್ದೇಶಕ ಎನ್.ಗಂಗಣ್ಣ, ಪುರಸಭೆ ಮಾಜಿ ಅಧ್ಯಕ್ಷ ಎಂ.ಕೆ.ನಂಜುಂಡಯ್ಯ, ಸದಸ್ಯರಾದ ಎಂ.ಶ್ರೀಧರ್, ಅಲೀಮ್, ಮಂಜುನಾಥ್ ಆಚಾರ್, ಸುರೇಶ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.