ಪಾವಗಡ: ತಾಲ್ಲೂಕಿನ ನಾಗಲಮಡಿಕೆ ಹೋಬಳಿ ಗ್ಯಾದಿಗುಂಟೆಯಲ್ಲಿ ಸ್ವಚ್ಛತೆ ಇಲ್ಲದೆ ಸಾಂಕ್ರಾಮಿಕ ರೋಗ ವ್ಯಾಪಿಸುವ ಆತಂಕ ಇದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಗ್ರಾಮದಲ್ಲಿ 250ಕ್ಕೂ ಹೆಚ್ಚು ಜನಸಂಖ್ಯೆ ಇದೆ. ಆದರೆ ಎಲ್ಲೆಂದರಲ್ಲಿ ಕೊಳಚೆ ನೀರು ಹರಿಯುತ್ತಿದೆ. ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಗಳಲ್ಲಿ ಕೊಳಚೆ ನೀರು ಹರಿಸಲಾಗುತ್ತಿದೆ. ರಸ್ತೆ ಬದಿ ತಿಪ್ಪೆ ಹಾಕಲಾಗಿದೆ. ಕೊಳಚೆ ನೀರನ್ನು ತುಳಿದುಕೊಂಡು ಮಕ್ಕಳು, ಸಾರ್ವಜನಿಕರು ಓಡಾಡಬೇಕಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಶೌಚಾಲಯ, ಮನೆಯ ಕೊಳಚೆ ನೀರನ್ನು ರಸ್ತೆಗಳಿಗೆ ಹರಿಸಲಾಗುತ್ತಿದೆ. ಇದರಿಂದ ಹಂದಿ, ಸೊಳ್ಳೆ, ನೊಣಗಳ ಪ್ರಮಾಣ ಹೆಚ್ಚಿದೆ. ಈ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ತಿಳಿಸಿದರೂ ಪ್ರಯೋಜನವಾಗುತ್ತಿಲ್ಲ ಎಂದು ದೂರಿದ್ದಾರೆ.
ಗ್ರಾಮದಲ್ಲಿ ಚರಂಡಿಯೇ ಇಲ್ಲ. ಚರಂಡಿ ಇಲ್ಲದೆ ಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತಿದೆ. ಶೀಘ್ರ ಸಂಬಂಧಿಸಿದವರು ಸಮಸ್ಯೆ ಬಗೆಹರಿಸಬೇಕು ಎಂದು ಗ್ರಾಮ ಪಂಚಾಯಿತಿಯ ಸದಸ್ಯ ಜಿ.ಟಿ ಮುತ್ಯಾಲು ಒತ್ತಾಯಿಸಿದ್ದಾರೆ.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಉತ್ತಮ್ ಪ್ರತಿಕ್ರಿಯಿಸಿ, ಪಿಡಿಒ ಅವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.