ತುಮಕೂರು: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಶುಕ್ರವಾರ ರಾತ್ರಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದುಕೊಂಡರು.
ಮಠಕ್ಕೆ ಬರುತ್ತಿದ್ದಂತೆ ಮೊದಲಿಗೆ ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದರು. ಸ್ವಾಮೀಜಿ ಪುತ್ಥಳಿಗೆ ನಮಿಸಿ ಆಶೀರ್ವಾದ ಬೇಡಿದರು. ನಂತರ ಸಿದ್ದಲಿಂಗ ಸ್ವಾಮೀಜಿ ಭೇಟಿಮಾಡಿ ಆಶೀರ್ವಾದ ಪಡೆದುಕೊಂಡರು. ಶಿವಕುಮಾರ ಸ್ವಾಮೀಜಿಯ ಬೆಳ್ಳಿ ಮೂರ್ತಿ ನೀಡಿ, ಅಕ್ಷತೆ ಹಾಕಿ ಆಶೀರ್ವದಿಸಿದರು. ಕೆಲ ಸಮಯ ಸ್ವಾಮೀಜಿ ಜತೆಗೆ ಚರ್ಚಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ ‘ಬೆಂಗಳೂರಿಗೆ ತೆರಳುತ್ತಿದ್ದಂತೆ ನೂತನ ಸಚಿವರಿಗೆ ಖಾತೆ ಹಂಚಿಕೆಮಾಡಿ, ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸಿಕೊಡಲಾಗುವುದು’ ಎಂದು ಹೇಳಿದರು.
ಸಚಿವರಾದ ಜೆ.ಸಿ.ಮಾಧುಸ್ವಾಮಿ, ಬಿ.ಸಿ.ನಾಗೇಶ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಸಂಸದ ಜಿ.ಎಸ್.ಬಸವರಾಜು, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಡಾ.ಸಿ.ಎಂ.ರಾಜೇಶ್ ಗೌಡ, ಎಂ.ಪಿ.ರೇಣುಕಾಚಾರ್ಯ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಗೌಡ ಮತ್ತಿತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.