ತುಮಕೂರು: ನಗರದ ಶ್ರೀದೇವಿ ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ನಡೆದ ಕರ್ನಾಟಕ ಪ್ರದೇಶ ಕುರುಬರ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಸಮುದಾಯ ಮತ್ತು ಸಂಘದ ಅಭಿವೃದ್ಧಿ ವಿಚಾರದಲ್ಲಿ ಹಲವು ಪ್ರಮುಖ ನಿರ್ಣಯಗಳನ್ನುಕೈಗೊಳ್ಳಲಾಯಿತು.
ರಾಜ್ಯದ ಎಲ್ಲ ಜಿಲ್ಲೆಗಳ ನಿರ್ದೇಶಕರು, ಕೇಂದ್ರ ಸಂಘದ ಪದಾಧಿಕಾರಿಗಳು ಸೇರಿದಂತೆ 118 ಮಂದಿ ಸಭೆಯಲ್ಲಿ ಪಾಲ್ಗೊಂಡಿದ್ದರು. ನಿರ್ದೇಶಕರು, ನಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ಕೆ.ಮಂಜುನಾಥ್, ವಿಧಾನಪರಿಷತ್ ಸದಸ್ಯ ಹುಲಿನಾಯ್ಕರ್, ದಾನಿ ನಾಗರಾಜ್ ಸೇರಿದಂತೆ ಹಲವರನ್ನು ಸನ್ಮಾನಿಸಲಾಯಿತು. ಶನಿವಾರ ಸಂಜೆ ಸಂಘದ ಪದಾಧಿಕಾರಿಗಳ ಸಭೆ ಸಹ ನಡೆದಿತ್ತು.
ಕುರುಬದ ಸಂಘದ ಅಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಘಟಕ ರಚನೆ, ಕಾನೂನು ಘಟಕ ರಚನೆ, ಉಪಸಲಹಾ ಸಮಿತಿ ರಚನೆ, ಆಜೀವ ಸದಸ್ಯತ್ವ ನೋಂದಣಿ ಮತ್ತೆ ಆರಂಭ, ಸಂಘದ ಬೈಲಾ ನಿಯಮಗಳನ್ನು ತಿದ್ದುಪಡಿ ಮಾಡಲು ಸಂಘದ ನಿರ್ದೇಶಕರನ್ನು ಒಳಗೊಂಡ ಸಮಿತಿ ರಚನೆ, ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಬೇಕಾಗಿದ್ದ 2019–20ನೇ ಸಾಲಿನ ಪ್ರತಿಭಾ ಪುರಸ್ಕಾರ ಮುಂದೂಡಿಕೆ ಬಗ್ಗೆ ಸಭೆಯಲ್ಲಿ ನಿರ್ಣಕೈಗೊಳ್ಳಲಾಯಿತು.
ಕುರುಬರ ಸಂಘದ ಕಚೇರಿ ನವೀಕರಣ ಸೇರಿದಂತೆ ವಿವಿಧ ಕಡೆಗಳಲ್ಲಿ ಕನಕ ಭವನ ನಿರ್ಮಾಣದ ಬಗ್ಗೆ ಅನುಮೋದನೆ ಪಡೆಯಲಾಯಿತು.
ಸಂಘದ ಕಾರ್ಯಾಧ್ಯಕ್ಷ ಬಿ.ಸುಬ್ರಹ್ಮಣ್ಯ ಅಧ್ಯಕ್ಷತೆವಹಿದ್ದರು. ಪ್ರಧಾನಕಾರ್ಯದರ್ಶಿ ಡಿ.ವೆಂಕಟೇಶಮೂರ್ತಿ, ಖಜಾಂಚಿ ದೇವರಜ ಸುಬ್ಬರಾಯಪ್ಪ, ಸಂಘಟನಾ ಕಾರ್ಯದರ್ಶಿಗಳಾದ ಶೋಭಾ, ಸಾವಿತ್ರಮ್ಮ, ನಿರ್ದೇಶಕರು ಹಾಗೂ ಪದಾಧಿಕಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.