ADVERTISEMENT

ಬಿಜೆಪಿ ಭ್ರಷ್ಟಾಚಾರ ಪಕ್ಷವೆಂದ ಸಿದ್ದರಾಮಯ್ಯ ಹೇಳಿಕೆಗೆ ಕೊಪ್ಪಲ್ ನಾಗರಾಜ್ ಖಂಡನೆ

​ಪ್ರಜಾವಾಣಿ ವಾರ್ತೆ
Published 31 ಜುಲೈ 2021, 8:09 IST
Last Updated 31 ಜುಲೈ 2021, 8:09 IST

ತುಮಕೂರು: ಬಿಜೆಪಿಯನ್ನು ‘ಭ್ರಷ್ಟಾಚಾರ ಪಕ್ಷ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿರುವುದನ್ನು ಬಿಜೆಪಿ ಜಿಲ್ಲಾ ವಕ್ತಾರ ಕೊಪ್ಪಲ್ ನಾಗರಾಜ್ ಖಂಡಿಸಿದ್ದಾರೆ.

ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸುವ ಭರದಲ್ಲಿ ‘ಬಿಜೆಪಿ ಭ್ರಷ್ಟಾಚಾರ ಪಕ್ಷ’ ಎಂದು ಟೀಕಿಸಿ ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

‘ಬಿಜೆಪಿ ಮುಂದಿನ ಮುಖ್ಯಮಂತ್ರಿ ಸಹ ಭ್ರಷ್ಟರೇ ಆಗಿರುತ್ತಾರೆ’ ಎಂದು ಹೇಳಿರುವುದು ಅವರ ಹಿರಿತನಕ್ಕೆ ತಕ್ಕುದಲ್ಲ. ಬಿಜೆಪಿ ಬಗ್ಗೆ ಹಗುರವಾಗಿ ಹೇಳಿಕೆ ನೀಡುವುದು ಅವರ ಸ್ಥಾನಕ್ಕೆ ಘನತೆ ತರುವುದಿಲ್ಲ. ಕಾಂಗ್ರೆಸ್ ಪಕ್ಷ ಸಹ ಭ್ರಷ್ಟಾಚಾರ, ಹಗರಣಗಳ ಸರಮಾಲೆಯನ್ನೇ ಹೊತ್ತಿದೆ ಎಂದು ದೂರಿದ್ದಾರೆ.

ADVERTISEMENT

‘ಮುಖ್ಯಮಂತ್ರಿಯಾಗಿ ಐದು ವರ್ಷ ಕಾಲ ಆಡಳಿತ ನಡೆಸಿದ್ದೇನೆ. ದೇವರಾಜ ಅರಸು ನಂತರ ಪೂರ್ಣಾವಧಿ ಅಧಿಕಾರ ಮುಗಿಸಿದ್ದು ನಾನೇ ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಿದ್ದಾರೆ. ಹಾಗಾದರೆ ಮುಖ್ಯಮಂತ್ರಿಯಾಗಿದ್ದು, 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 80 ಸ್ಥಾನಗಳಿಗೆ ಕುಸಿದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ’ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಸಮಾಜವನ್ನು ಜಾತಿ, ಧರ್ಮದ ಹೆಸರಿನಲ್ಲಿ ಒಡೆದಾಳುವ ನೀತಿಯನ್ನು ಜಾರಿಗೊಳಿಸಲು ಪ್ರಯತ್ನಿಸಿದ್ದು, ರಾಜ್ಯದ ಜನರ ಮನಸ್ಸಿನಲ್ಲಿ ಹಸಿರಾಗಿಯೇ ಇದೆ. ಮತ್ತೆ ಮುಖ್ಯಮಂತ್ರಿ ಆಗಬೇಕೆಂಬ ಹಗಲುಗನಸು ಕಾಣುತ್ತಿದ್ದಾರೆ. ತಮ್ಮ ಪಕ್ಷದಲ್ಲಿ ನಡೆಯುತ್ತಿರುವ ಕಚ್ಚಾಟ ಸರಿಪಡಿಸಿಕೊಳ್ಳುವುದು ಬಿಟ್ಟು ಬೇರೆ ಪಕ್ಷದ ಬಗ್ಗೆ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಸಲಹೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.