ADVERTISEMENT

‘ಕಾಂಗ್ರೆಸ್‌ ಆರೋಪ ನಿರಾಧಾರ’

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2023, 5:43 IST
Last Updated 28 ಮಾರ್ಚ್ 2023, 5:43 IST
ಶಿರಾದಲ್ಲಿ ಸೋಮವಾರ ಗ್ರಾಮೀಣ ಪ್ರದೇಶದ ಕಂದಾಯ ಗ್ರಾಮದ ಅರ್ಹ ಫಲಾನುಭವಿಗಳಿಗೆ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹಕ್ಕುಪತ್ರ ವಿತರಿಸಿದರು. ಶಾಸಕ ಡಾ.ಸಿ.ಎಂ. ರಾಜೇಶ್ ಗೌಡ, ನಗರಸಭೆ ಅಧ್ಯಕ್ಷ ಅಂಜಿನಪ್ಪ, ಶಿರಾ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಾರುತೀಶ್, ತಹಶೀಲ್ದಾರ್ ಮುರಳೀಧರ್ ಇದ್ದರು
ಶಿರಾದಲ್ಲಿ ಸೋಮವಾರ ಗ್ರಾಮೀಣ ಪ್ರದೇಶದ ಕಂದಾಯ ಗ್ರಾಮದ ಅರ್ಹ ಫಲಾನುಭವಿಗಳಿಗೆ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹಕ್ಕುಪತ್ರ ವಿತರಿಸಿದರು. ಶಾಸಕ ಡಾ.ಸಿ.ಎಂ. ರಾಜೇಶ್ ಗೌಡ, ನಗರಸಭೆ ಅಧ್ಯಕ್ಷ ಅಂಜಿನಪ್ಪ, ಶಿರಾ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಾರುತೀಶ್, ತಹಶೀಲ್ದಾರ್ ಮುರಳೀಧರ್ ಇದ್ದರು   

ಶಿರಾ: ‘ಕಾಂಗ್ರೆಸ್ ಮುಖಂಡರು ಹಕ್ಕುಪತ್ರ ವಿತರಿಸುತ್ತಿರುವುದನ್ನು ಸಹಿಸದೆ ಬೋಗಸ್ ಹಕ್ಕುಪತ್ರ ವಿತರಿಸುತ್ತಿದ್ದಾರೆ ಎಂದು ಸುಳ್ಳು ಆರೋಪ ಮಾಡುತ್ತಿದ್ದಾರೆ. ಆದರೆ, ನಾವು ತಹಶೀಲ್ದಾರ್ ಸಹಿ ಇರುವ ಅಧಿಕೃತವಾದ ಹಕ್ಕುಪತ್ರ ನೀಡುತ್ತಿದ್ದು ಇದು ಯಾವುದೇ ಕಾರಣಕ್ಕೂ ಅಸಿಂಧುವಾಗುವುದಿಲ್ಲ’ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಸ್ಪಷ್ಟಪಡಿಸಿದರು.

ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ಸೋಮವಾರ ಗ್ರಾಮೀಣ ಪ್ರದೇಶದ ಕಂದಾಯ ಗ್ರಾಮದ ಅರ್ಹ ಫಲಾನುಭವಿಗಳಿಗೆ ಹಮ್ಮಿಕೊಂಡಿದ್ದ ಹಕ್ಕುಪತ್ರ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಸಮಯದಲ್ಲಿ ಕಂದಾಯ ಗ್ರಾಮಗಳ ನಿರ್ಮಾಣದ ಘೋಷಣೆ ಮಾಡಿದ್ದರು. ಆದರೆ, ಅವರು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸದೆ ವಂಚಿಸುವ ಕೆಲಸ ಮಾಡಿದ್ದರು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಲಂಬಾಣಿ ತಾಂಡಾ, ಗೊಲ್ಲರಹಟ್ಟಿ, ವಡ್ಡರಹಟ್ಟಿ ಸೇರಿದಂತೆ ಹಲವಾರು ಕಡೆ ದಾಖಲೆ ರಹಿತವಾಗಿ ಜನರು ವಾಸಿಸುತ್ತಿರುವುದನ್ನು ಗುರುತಿಸಿ ಹಕ್ಕುಪತ್ರ ನೀಡಲಾಗುತ್ತಿದೆ ಎಂದು ತಿಳಿಸಿದರು.

ADVERTISEMENT

ಶಾಸಕ ಡಾ.ಸಿ.ಎಂ. ರಾಜೇಶ್ ಗೌಡ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಂದಾಯ ಸಚಿವ ಅಶೋಕ ನೇತೃತ್ವದಲ್ಲಿ ಗ್ರಾಮೀಣ ಪ್ರದೇಶದಲ್ಲಿ ದಾಖಲೆಯಲ್ಲಿ ಇಲ್ಲದ ಜನರು ವಾಸಿಸುವ ಪ್ರದೇಶವನ್ನು ಕಂದಾಯ ಗ್ರಾಮವಾಗಿ ಪರಿವರ್ತಿಸಲಾಗಿದೆ. ಅಲ್ಲಿ ವಾಸಿಸುವ ಜನರಿಗೆ ಹಕ್ಕುಪತ್ರ ವಿತರಿಸುತ್ತಿದ್ದಾರೆ. ಅದರಂತೆ ತಾಲ್ಲೂಕಿನಲ್ಲಿ 94ಡಿ ಅಡಿಯಲ್ಲಿ ಒಟ್ಟು 1,117 ಹಕ್ಕುಪತ್ರ ವಿತರಿಸಲಾಗುತ್ತಿದೆ ಎಂದು ವಿವರಿಸಿದರು.

ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಚಂಗಾವರ ಮಾರಣ್ಣ, ನಗರಸಭೆ ಅಧ್ಯಕ್ಷ ಅಂಜಿನಪ್ಪ, ಶಿರಾ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಾರುತೀಶ್, ತಹಶೀಲ್ದಾರ್ ಮುರಳೀಧರ್, ತಾ.ಪಂ ಇಒ ಅನಂತರಾಜ್, ಕಂದಾಯ ನಿರೀಕ್ಷಕ ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.