ADVERTISEMENT

ಸೈಕಲ್‌ ಜಾಥಾ: ಅಗತ್ಯ ವಸ್ತು ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2021, 8:25 IST
Last Updated 15 ಜುಲೈ 2021, 8:25 IST
ಇಂಧನ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಮಧುಗಿರಿ ತಾಲ್ಲೂಕು ಕಾಂಗ್ರೆಸ್‌ ಸಮಿತಿಯಿಂದ ಸೈಕಲ್ ಜಾಥಾ ನಡೆಯಿತು
ಇಂಧನ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಮಧುಗಿರಿ ತಾಲ್ಲೂಕು ಕಾಂಗ್ರೆಸ್‌ ಸಮಿತಿಯಿಂದ ಸೈಕಲ್ ಜಾಥಾ ನಡೆಯಿತು   

ಮಧುಗಿರಿ: ಅಗತ್ಯ ವಸ್ತು ಮತ್ತು ಇಂಧನ ಬೆಲೆ ಏರಿಕೆ ಖಂಡಿಸಿ ತಾಲ್ಲೂಕು ಕಾಂಗ್ರೆಸ್ ಸಮಿತಿಯಿಂದ ಬುಧವಾರ ಸೈಕಲ್ ಜಾಥಾ ನಡೆಸಲಾಯಿತು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸೈಕಲ್ ಜಾಥಾ ನಡೆಸಿ ನಂತರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಆರ್.ರಾಜೇಂದ್ರ ಮಾತನಾಡಿ, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಏರುತ್ತಿದೆ. ಇದರಿಂದಾಗಿ ಜನರಿಗೆ ತೊಂದರೆಯಾಗುತ್ತಿದೆ. ಕೋವಿಡ್‌ನಿಂದ ತತ್ತರಿಸುತ್ತಿರುವ ಸಾರ್ವಜನಿಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇಂತಹ ಕಠಿಣ ಪರಿಸ್ಥಿತಿಗೆ ಬಿಜೆಪಿ ನೇತೃತ್ವದ ರಾಜ್ಯ ಮತ್ತು ಕೇಂದ್ರ ಸರ್ಕಾರ ಕಾರಣವಾಗಿದೆ.
ಸರ್ಕಾರದ ಆಡಳಿತದಿಂದ ಜನ ಹೈರಾಣಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ಸರ್ಕಾರ ಉದ್ಯಮಿಗಳ ಪರ ನಿಂತು ಜನಸಾಮಾನ್ಯರನ್ನು ಶೋಷಿಸುತ್ತಿದೆ. ಸಮಾಜಮುಖಿ ಹಾಗೂ ಸುಭದ್ರ ಸರ್ಕಾರ ನೀಡಲು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. ಬಿಜೆಪಿ ರಾಮರಾಜ್ಯದ ಹೆಸರಿನಲ್ಲಿ ರಾಕ್ಷಸ ರಾಜ್ಯವನ್ನು ಕಟ್ಟಲು ಹೊರಟಿದ್ದು, ಸಾವಿರಾರು ಯುವಕರು ನಿರುದ್ಯೋಗಿಗಳಾಗಿ ಬೀದಿಪಾಲಾಗುತ್ತಿದ್ದಾರೆ ಎಂದು ದೂರಿದರು.

ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕಲು ವಿಫಲವಾದ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಆಡಳಿತ ನಡೆಸುವ ಯಾವುದೇ ನೈತಿಕತೆಯಿಲ್ಲ. ಕೂಡಲೇ ಅಧಿಕಾರ ಬಿಟ್ಟು ತೊಲಗಿ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಒತ್ತಾಯಿಸಿದ ಅವರು ಉಪವಿಭಾಗಾಧಿಕಾರಿ ಕಚೇರಿಯ ಗ್ರೇಡ್ 2 ತಹಶೀಲ್ದಾರ್ ವರದರಾಜ್ ಅವರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟೆ, ಜಿಲ್ಲಾ ಕಾಂಗ್ರೆಸ್ ವೀಕ್ಷಕ ಚಂದ್ರಶೇಖರ್ ಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಿ.ಜೆ. ರಾಜಣ್ಣ, ರಾಜ್ಯ ಸಹಕಾರ ಮಹಾಮಂಡಳದ ಮಾಜಿ ಅಧ್ಯಕ್ಷ ಎನ್.ಗಂಗಣ್ಣ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ. ನಾಗೇಶ್ ಬಾಬು, ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಸುವರ್ಣಮ್ಮ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಇಂದಿರಾ ದೇನಾನಾಯ್ಕ, ಪುರಸಭಾಧ್ಯಕ್ಷ ತಿಮ್ಮರಾಯಪ್ಪ, ಮಾಜಿ ಅಧ್ಯಕ್ಷ ಎಂ.ಕೆ. ನಂಜುಂಡಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂಎಸ್ ಮಲ್ಲಿಕಾರ್ಜುನಯ್ಯ, ಎಸ್.ಆರ್. ರಾಜಗೋಪಾಲ್, ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಎಸ್.ಕೆ. ವೆಂಕಟೇಶ್, ಕಾರ್ಯಾಧ್ಯಕ್ಷ ಬಿ.ಎನ್. ನಾಗರ್ಜುನ, ಎಪಿಎಂಸಿ ಮಾಜಿ ಅಧ್ಯಕ್ಷ ಪಿ.ಟಿ. ಗೋವಿಂದಯ್ಯ, ಎಂ.ಬಿ. ಮರಿಯಣ್ಣ, ಪಿ.ಸಿ. ಕೃಷ್ಣಾರೆಡ್ಡಿ, ಕೆ.ಟಿ. ತಿಮ್ಮಾರೆಡ್ಡಿ, ಪಂಚಾಕ್ಷರಯ್ಯ, ವಿ.ಆರ್. ಭಾಸ್ಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.