ADVERTISEMENT

ಕುರಿಗಾಹಿಗೆ ಕೋವಿಡ್: 43 ಮೇಕೆಗಳು ಕ್ವಾರಂಟೈನ್

ಗೋಡೆಕೆರೆ ಗೊಲ್ಲರಹಟ್ಟಿ; ಸಚಿವ ಮಾಧುಸ್ವಾಮಿ ಸೂಚನೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 6:01 IST
Last Updated 30 ಜೂನ್ 2020, 6:01 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಗೋಡೆಕೆರೆ ಗೊಲ್ಲರಹಟ್ಟಿಯ ಕುರಿಗಾಹಿಯೊಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಈ ಹಿನ್ನೆಲೆಯಲ್ಲಿ ಅವರ 43 ಮೇಕೆಗಳನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಈ ಮೇಕೆಗಳಿಗೂ ಕೊರೊನಾ ಪರೀಕ್ಷೆ ಮಾಡಿಸುವಂತೆ ಚಿಕ್ಕನಾಯಕನಹಳ್ಳಿ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೋಮವಾರ ಜಿಲ್ಲಾಡಳಿತ ಮತ್ತು ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜ್ವರದಿಂದ ಬಳಲುತ್ತಿದ್ದ ಗೊಲ್ಲರಹಟ್ಟಿಯ ವ್ಯಕ್ತಿಯನ್ನು ಆತನ ಸ್ನೇಹಿತರೊಬ್ಬರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಜೂ.23ರಂದು ಆ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆ ಆಗಿತ್ತು. ಈ ನಡುವೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಸ್ನೇಹಿತನ ಮನೆಯಲ್ಲಿ ಐದು ಮೇಕೆಗಳು ಏಕಾಏಕಿ ಮೃತಪಟ್ಟಿವೆ. ಅವರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಆರೋಗ್ಯವಾಗಿದ್ದ ಮೇಕೆಗಳ ಸಾವು ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ.

ಸೋಂಕಿತ ವ್ಯಕ್ತಿಯನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿದ ಮರುದಿನವೇ ಅವರ ಸಂಬಂಧಿಕರು 43 ಮೇಕೆಗಳನ್ನು ಜಕ್ಕನಹಳ್ಳಿಗೆ ಕೊಂಡೊಯ್ದಿದ್ದಾರೆ. ಅಲ್ಲಿ ಅವುಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ.

ADVERTISEMENT

‘ಇಲ್ಲಿಯವರೆಗೂ ಕೊರೊನಾ ಕುರಿ, ಮೇಕೆಗಳ ಮೂಲಕ ಹರಡಿದೆ ಎಂಬುದಕ್ಕೆ ಆಧಾರವಿಲ್ಲ. ಆದರೂ ಕೊರೊನಾ ವಿಭಿನ್ನ ಸ್ವರೂಪದಲ್ಲಿರುವುದರಿಂದ ಮೇಕೆಗಳ ಗಂಟಲು ಸ್ರಾವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿ. ಅಲ್ಲಿಯವರೆಗೂ ಅವುಗಳನ್ನು ಪ್ರತ್ಯೇಕವಾಗಿಯೇ ಇರಿಸಲು ಕ್ರಮಕೈಗೊಳ್ಳಿ’ ಎಂದು ಮಾಧುಸ್ವಾಮಿ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.