ತುಮಕೂರು/ಕುಣಿಗಲ್: ಜಿಲ್ಲೆಯಲ್ಲಿ ಮತ್ತೆ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಇಬ್ಬರನ್ನೂ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾವಗಡ ತಾಲ್ಲೂಕಿಗೆ ಮೇ 25ರಂದು ನವದೆಹಲಿಯಿಂದ ಬಂದ 30 ವರ್ಷದ (ರೋಗಿ 2771) ವ್ಯಕ್ತಿಯನ್ನು ಅಲ್ಲಿನ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿತ್ತು.
ಅಂದೇ ಕಫ ಮತ್ತು ಗಂಟಲು ಸ್ರಾವದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಮೂರು ಮಂದಿಯನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ.
ಮಹಾರಾಷ್ಟ್ರದಿಂದ ಮೇ 14ರಂದು ಕುಣಿಗಲ್ ತಾಲ್ಲೂಕಿನ ಅಮೃತೂರು ಪೊಲೀಸ್ ಠಾಣೆ ವ್ಯಾಪ್ತಿಯ ಮೇಗಲಪಾಳ್ಯಕ್ಕೆ ಮುಂಬೈನಿಂದ ಮೂರು ಜನರು ಬಂದಿದ್ದರು. ಈ ಮೂವರನ್ನು ಕ್ವಾರಂಟೈನ್ ಮಾಡಲಾಗಿತ್ತು. ಅಂದೇ ಇವರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ನೆಗೆಟಿವ್ ಬಂದಿದ್ದವು. ಮತ್ತೆ ಮೇ 26ರಂದು ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇವರಲ್ಲಿ 22 ವರ್ಷದ ವ್ಯಕ್ತಿ (ರೋಗಿ 2772)ಗೆ ಸೋಂಕು ಇರುವುದು ದೃಢವಾಗಿದೆ.
ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30ಕ್ಕೇರಿದೆ. 22 ಸಕ್ರಿಯ ಪ್ರಕರಣಗಳು ಇವೆ.
ಗುಣಮುಖ: ಸೋಂಕಿನಿಂದ ಬಳಲುತ್ತಿದ್ದ ರೋಗಿಯೊಬ್ಬರು ಗುಣಮುಖರಾಗಿದ್ದು ಆಸ್ಪತ್ರೆಯಿಂದ ಶುಕ್ರವಾರ ಬಿಡುಗಡೆಯಾದರು. ಜಿಲ್ಲೆಯಲ್ಲಿ ಒಟ್ಟು 6 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.