ADVERTISEMENT

ಮನೆ ನಿರ್ಮಾಣಕ್ಕೆ ಕೋವಿಡ್ ಅಡ್ಡಿ: ವಸತಿ ಸಚಿವ ವಿ.ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 6 ಜೂನ್ 2021, 2:06 IST
Last Updated 6 ಜೂನ್ 2021, 2:06 IST
ತುಮಕೂರಿನಲ್ಲಿ ಸಚಿವ ವಿ.ಸೋಮಣ್ಣ ಅವರು ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು. ಸಂಸದ ಜಿ.ಎಸ್.ಬಸವರಾಜು, ಶಾಸಕ ಜ್ಯೋತಿಗಣೇಶ್, ಮೇಯರ್ ಬಿ.ಜೆ.ಕೃಷ್ಣಪ್ಪ, ಮುಖಂಡ ಸೊಗಡು ಶಿವಣ್ಣ ಇದ್ದರು
ತುಮಕೂರಿನಲ್ಲಿ ಸಚಿವ ವಿ.ಸೋಮಣ್ಣ ಅವರು ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು. ಸಂಸದ ಜಿ.ಎಸ್.ಬಸವರಾಜು, ಶಾಸಕ ಜ್ಯೋತಿಗಣೇಶ್, ಮೇಯರ್ ಬಿ.ಜೆ.ಕೃಷ್ಣಪ್ಪ, ಮುಖಂಡ ಸೊಗಡು ಶಿವಣ್ಣ ಇದ್ದರು   

ತುಮಕೂರು: ರಾಜ್ಯದಲ್ಲಿ ಕಳೆದ ವರ್ಷ 10 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿತ್ತು. ಕೋವಿಡ್–19ನಿಂದ ಹಿನ್ನಡೆಯಾಗಿದ್ದು, 3 ಲಕ್ಷ ಮನೆ ನಿರ್ಮಾಣ ಮಾಡಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಶನಿವಾರ ತಿಳಿಸಿದರು.

ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಭೇಟಿಮಾಡಿ ಗುಪ್ತ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 3 ಲಕ್ಷ ಮನೆಗಳನ್ನು ನಿರ್ಮಿಸಿ ನಗರ ಹಾಗೂ ಗ್ರಾಮೀಣ ಭಾಗದ ವಸತಿ ರಹಿತರಿಗೆ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.

ADVERTISEMENT

ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ‘ಆಡಳಿತ ಯಂತ್ರ ಕುಸಿದಿಲ್ಲ. ಬಿಜೆಪಿ ಸರ್ಕಾರ ಸಮರ್ಥವಾಗಿ ಕೆಲಸ ನಿರ್ವಹಿಸುತ್ತಿದೆ. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಪಾಲಿಕೆ ಆಯುಕ್ತರಾದ ಶಿಲ್ಪನಾಗ್ ವಿಚಾರದಲ್ಲಿ ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿ ಕ್ರಮ ತೆಗೆದುಕೊಳ್ಳುತ್ತಾರೆ’ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ– ಮೂರು ಪಕ್ಷಗಳ ಸರ್ಕಾರ ಇದೆ ಎಂದು ಸಚಿವ ಸಿ.ಪಿ.ಯೋಗೇಶ್ವರ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ಕೊಡಲಿಲ್ಲ. ಯಾವ ಅರ್ಥದಲ್ಲಿ ಇಂತಹ ಹೇಳಿಕೆ ಕೊಟ್ಟಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಹೇಳಿದರು.‌

ಗುಪ್ತ ಮಾತುಕತೆ: ಸ್ವಾಮೀಜಿ ಜತೆಗೆ ಸುಮಾರು 40 ನಿಮಿಷಗಳ ಕಾಲ ಸೋಮಣ್ಣ ಗೌಪ್ಯ ಚರ್ಚೆ ನಡೆಸಿದರು. ಈ ಸಮಯದಲ್ಲಿ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಚರ್ಚೆಗಳು ನಡೆದಿವೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗೆ ಳಿಸಬೇಕು ಎಂದು ಪಕ್ಷದಲ್ಲೇ ಕೆಲವರು ಒತ್ತಡ ಹಾಕುತ್ತಿದ್ದು, ಈ ವಿಚಾರ ಪ್ರಮುಖವಾಗಿ ಚರ್ಚೆಗೆ ಬಂದು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.