ತುಮಕೂರು: ಮಧುಗಿರಿ ತಾಲ್ಲೂಕಿನ ತಿಪ್ಪಾಪುರ ತಾಂಡಾದ 28 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.
ಸೋಂಕಿತ ವ್ಯಕ್ತಿ ಮುಂಬೈನ ಹೋಟೆಲ್ವೊಂದರದಲ್ಲಿ ಕೆಲಸ ಮಾಡುತ್ತಿದ್ದರು. ಕುಟುಂಬ ಸಮೇತರಾಗಿ ಜೂನ್ 2ರಂದು ಉದ್ಯಾನ್ ಎಕ್ಸ್ಪ್ರೆಸ್ ರೈಲಿನಲ್ಲಿ ಬಂದು ಗೌರಿಬಿದನೂರಿನಲ್ಲಿ ಇಳಿದಿದ್ದರು. ಇವರನ್ನು ಆಂಬುಲೆನ್ಸ್ ಮೂಲಕ ಮಧುಗಿರಿ ಆಸ್ಪತ್ರೆಯಲ್ಲಿ ದಾಖಲಿಸಿ ಅಲ್ಲಿಂದ ಬೇಡತ್ತೂರು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿತ್ತು. ಜೂ.4ರಂದು ಕಫ ಮತ್ತು ಗಂಟಲು ಸ್ರಾವದ ಮಾದರಿಗಳ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮುಂಬೈನಿಂದ ಇವರ ಜತೆ ಬಂದ ನಾಲ್ಕು ಮಂದಿ ಕುಟುಂಬ ಸದಸ್ಯರು ಹಾಗೂ ಊರುಕೆರೆ ವ್ಯಕ್ತಿಯೊಬ್ಬರು ಇವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದರು. ಈ ಎಲ್ಲರನ್ನೂ ಕ್ವಾರಂಟೈನ್ಗೆ ಒಳಪಡಿಸಲಾಗಿದೆ.
7 ಮಂದಿ ಬಿಡುಗಡೆ: ಕೊರೊನಾ ಸೋಂಕಿಗೆ ತುತ್ತಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 7 ಮಂದಿ ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಯಾದರು. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. 9 ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ.
ಎಡೆಯೂರು ವ್ಯಕ್ತಿಗೆ ಕೊರೊನಾ?
ಕುಣಿಗಲ್ ತಾಲ್ಲೂಕು ಎಡೆಯೂರು ಸಿದ್ಧಲಿಂಗೇಶ್ವರ ದೇವಾಲಯದ ಹಿಂಭಾಗ ಕ್ಷೌರಿಕ ವೃತ್ತಿ ಮಾಡುತ್ತಿರುವ 46 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ ಎನ್ನಲಾಗುತ್ತಿದೆ. ಅವರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅವರ ಕಫ ಮತ್ತು ಗಂಟಲು ಸ್ರಾವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಸೋಂಕು ತಗುಲಿದೆಯೇ ಎನ್ನುವುದು ದೃಢವಾಗಿಲ್ಲ.
ಈ ನಡುವೆಯೇ ಅಧಿಕಾರಿಗಳು ಗುರುವಾರ ರಾತ್ರಿಯಿಂದಲೇ ಎಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದ್ದಾರೆ. ತಾಲ್ಲೂಕು ಮಟ್ಟದ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿತು. ಕುಟುಂಬದವರನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರಂಟೈನಲ್ಲಿ ಇರಿಸಲಾಗಿದೆ.
ಇವರ ಸಂಚಾರ ಇತಿಹಾಸದ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಕಳೆದ ತಿಂಗಳು ಮಂಡ್ಯ ಜಿಲ್ಲೆ ನಾಗಮಂಗಲ ಮತ್ತು ತುರುವೇಕೆರೆಗೆ ತೆರಳಿದ್ದರು. ಎಡೆಯೂರಿನಲ್ಲಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇವರ ಮನೆ ವ್ಯಾಪ್ತಿಯನ್ನು ಸೀಲ್ಡೌನ್ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.