ADVERTISEMENT

ಶಾಸಕ ಬಿ.ಸತ್ಯನಾರಾಯಣ ಪಂಚಭೂತಗಳಲ್ಲಿ ಲೀನ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2020, 7:55 IST
Last Updated 6 ಆಗಸ್ಟ್ 2020, 7:55 IST

ಶಿರಾ: ಜೆಡಿಎಸ್ ಮುಖಂಡ ಹಾಗೂ ಶಾಸಕ ಬಿ.ಸತ್ಯನಾರಾಯಣ ಅಂತ್ಯಕ್ರಿಯೆ ಬುಧವಾರ ಸಂಜೆ ತಾಲ್ಲೂಕಿನ ಭುವನಹಳ್ಳಿ ಗ್ರಾಮದಲ್ಲಿರುವ ಅವರ ತೋಟದಲ್ಲಿ ನಡೆಯಿತು.

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ಅನಾರೋಗ್ಯದಿಂದ ನಿಧನರಾದ ಸತ್ಯನಾರಾಯಣ ಪಾರ್ಥಿವ ಶರೀರವನ್ನು ಬುಧವಾರ ತುಮಕೂರಿನ ಜೆಡಿಎಸ್ ಕಚೇರಿಯಲ್ಲಿ ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು.

ಅಲ್ಲಿಂದ ಶಿರಾಕ್ಕೆ ತಂದು ಕುಂಚಿಟಿಗರ ಸಂಘದ ಆವರಣದಲ್ಲಿ ಇಟ್ಟು ಗೌರವ ಸಲ್ಲಿಸಲಾಯಿತು. ಎಪಿಎಂಸಿ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಿತ್ತು. ನಂತರ ಭುವನಹಳ್ಳಿ ಗ್ರಾಮದ ಅವರ ತೋಟದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು.

ADVERTISEMENT

ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ‌.ಮಾಧುಸ್ವಾಮಿ ಅವರು ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ರಾಷ್ಟ್ರ ಧ್ವಜವನ್ನು ಅವರ ಕುಟುಂಬದವರಿಗೆ ನೀಡಿದರು. ಪೊಲೀಸರು ಗೌರವ ರಕ್ಷೆ ನೀಡಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿದರು. ನಂತರ ಪಾರ್ಥಿವ ಶರೀರವನ್ನು ಹಿಂದೂ ಸಂಪ್ರದಾಯದಂತೆ ಮಣ್ಣು ಮಾಡಲಾಯಿತು. ಸತ್ಯನಾರಾಯಣ ಪುತ್ರ ಸತ್ಯಪ್ರಕಾಶ್ ವಿಧಿವಿಧಾನಗಳನ್ನು ಪೂರೈಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.