ತುಮಕೂರು: ಪರಿತ್ಯಕ್ತ ಮಕ್ಕಳಿಗಾಗಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಮಾದರಿ ಮಮತೆಯ ತೊಟ್ಟಿಲು ನಿರ್ಮಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಅವರು ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿ ಜಿಲ್ಲಾ ಮಟ್ಟದ ಸಮಿತಿ ಸಭೆ, ಮಕ್ಕಳ ರಕ್ಷಣಾ ಸಮಿತಿ ಹಾಗೂ ಮಕ್ಕಳ ಸಹಾಯವಾಣಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಪರಿತ್ಯಕ್ತ ಮಕ್ಕಳನ್ನು ವಶಕ್ಕೆ ನೀಡಲು ಪ್ರಾಥಮಿಕ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಜಿಲ್ಲೆಯ 170 ಸ್ಥಳಗಳಲ್ಲಿ ಮಮತೆಯ ತೊಟ್ಟಿಲನ್ನು ಈಗಾಗಲೇ ಆರಂಭಿಸಲಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರದಲ್ಲಿ ಸುಸಜ್ಜಿತವಾದ ಸುರಕ್ಷತೆ ಮಾದರಿ ಮಮತೆಯ ತೊಟ್ಟಿಲನ್ನು ನಿರ್ಮಾಣ ಮಾಡಿ ಮುಂದಿನ ಸಭೆಯ ವೇಳೆಗೆ ವರದಿ ನೀಡಿ ಎಂದರು.
ಎಚ್ಐವಿ ಬಾಧಿತ ಪೋಷಕರು ಹಾಗೂ ಮಕ್ಕಳಿಗೆ ಜಿಲ್ಲೆಯ ತಪಾಸಣಾ ಕೇಂದ್ರಗಳಲ್ಲಿ ಉತ್ತಮ ಚಿಕಿತ್ಸೆ ಲಭ್ಯವಾಗುತ್ತಿರುವ ಬಗ್ಗೆ ಹಾಗೂ ಪ್ರತಿ ತಿಂಗಳು ತಪಾಸಣೆಗೆ ಬರುತ್ತಿರುವ ಬಗ್ಗೆ ವರದಿ ನೀಡುವಂತೆ ಡಿಎಚ್ಒ ಅವರಿಗೆ ನಿರ್ದೇಶನ ನೀಡಿದರು.
ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ, ಮಾದಕ ವಸ್ತು ಸೇವನೆ, ಲೈಂಗಿಕ ದೌರ್ಜನ್ಯ ಮತ್ತಿತರ ವಿಷಯಗಳ ಬಗ್ಗೆ ಜಿಲ್ಲೆಯಲ್ಲಿರುವ ಪಿಯುಸಿ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ ಮೂಡಿಸಬೇಕು. ಇದಕ್ಕಾಗಿ ವೈದ್ಯರು, ಮನೋವಿಜ್ಞಾನಿಗಳು, ಪೊಲೀಸರನ್ನು ಒಳಗೊಂಡಂತೆ ಸಂಪನ್ಮೂಲ ವ್ಯಕ್ತಿಗಳನ್ನು ನೇಮಿಸಬೇಕು. ಈ ಕುರಿತು ಕ್ರಿಯಾ ಯೋಜನೆ ತಯಾರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಬಾಲ್ಯ ವಿವಾಹ, ಮಕ್ಕಳ ರಕ್ಷಣೆ ಮತ್ತಿತರ ಪ್ರಕರಣಗಳಲ್ಲಿ ಜಿಲ್ಲಾ ಮಟ್ಟದ ಸಮಿತಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಪ್ರಕರಣಗಳ ತೀವ್ರತೆ ಆಧರಿಸಿ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದರು.
ಮಕ್ಕಳ ಸಹಾಯವಾಣಿ 1098 ಬಗ್ಗೆ ವ್ಯಾಪಕ ಪ್ರಚಾರ ನೀಡಲು ಪ್ರಚಾರ ಫಲಕವನ್ನು ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಪ್ರದರ್ಶಿಸಬೇಕು ಎಂದು ಹೇಳಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಟರಾಜು, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ವಾಸಂತಿ ಉಪ್ಪಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಿಕಾ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.