ADVERTISEMENT

ಮಳೆ ಅನನುಕೂಲ; ಜಾಗ್ರತೆವಹಿಸಿ

ತುರ್ತುಸಭೆ ನಡೆಸಿದ ಜಿಲ್ಲಾಧಿಕಾರಿ ರಾಕೇಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2019, 13:47 IST
Last Updated 9 ಆಗಸ್ಟ್ 2019, 13:47 IST
ಡಾ.ಕೆ.ರಾಕೇಶ್ ಕುಮಾರ್
ಡಾ.ಕೆ.ರಾಕೇಶ್ ಕುಮಾರ್   

ತುಮಕೂರು: ಜಿಲ್ಲೆಯಲ್ಲಿ ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಳೆಯಿಂದ ಆಗುವ ಅನಾಹುತಗಳನ್ನು ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಈ ಸಂಬಂಧ ವಿವಿಧ ಇಲಾಖೆಗಳ ಅಧಿಕಾರಿಗಳ ತುರ್ತುಸಭೆ ನಡೆಸಿದರು.

ಮಳೆಯಿಂದ ಉಂಟಾಗಬಹುದಾದ ಪರಿಸ್ಥಿತಿಗಳನ್ನು ಸಮರ್ಥವಾಗಿ ನಿಭಾಯಿಸಲು ಅರಣ್ಯ ಇಲಾಖೆ, ಕಂದಾಯ ಇಲಾಖೆ, ಬೆಸ್ಕಾಂ, ಲೋಕೋಪಯೋಗಿ ಇಲಾಖೆ, ಅಗ್ನಿಶಾಮಕದಳ, ಪೊಲೀಸ್ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸನ್ನದ್ದರಾಗಿರಬೇಕು ಎಂದರು.

ADVERTISEMENT

ಮಳೆಯಿಂದ ರಸ್ತೆಗಳು ಹದಗೆಟ್ಟರೆ ಪರ್ಯಾಯ ಮಾರ್ಗಗಳನ್ನು ಕೂಡ ಸಾರ್ವಜನಿಕರಿಗೆ ಕಲ್ಪಿಸಿಕೊಡಬೇಕಾಗುತ್ತದೆ. ಅಂತಹ ಪರ್ಯಾಯ ಮಾರ್ಗಗಳನ್ನು ಗುರುತಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಅಗ್ನಿಶಾಮಕದಳ ಹಾಗೂ ಅರಣ್ಯ ಇಲಾಖೆಯಲ್ಲಿರುವ ಪರಿಕರಗಳ ಬಗ್ಗೆಯೂ ಮಾಹಿತಿ ಪಡೆದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭ ಕಲ್ಯಾಣ್ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಟಿ. ಭೂಬಾಲನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಕೇಂದ್ರಸ್ಥಾನ ತೊರೆಯದಿರಿ
ಮಳೆ ಹೆಚ್ಚಾಗುವ ಮುನ್ಸೂಚನೆ ಇರುವುದರಿಂದ ಜಿಲ್ಲೆಯ ಎಲ್ಲ ಅಧಿಕಾರಿಗಳು ಸಾರ್ವತ್ರಿಕ ರಜೆ ದಿನಗಳಲ್ಲಿ ಹಾಗೂ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಪೂರ್ವಾನುಮತಿ ಪಡೆಯದೆ ಕೇಂದ್ರಸ್ಥಾನ ಬಿಡಬಾರದು ಹಾಗೂ ಮೊಬೈಲ್ ಸಂಪರ್ಕಕ್ಕೆ ಲಭ್ಯವಿರಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.