ಕೊರಟಗೆರೆ: ತಾಲ್ಲೂಕಿನ ಅಕ್ಕಿರಾಂಪುರ ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಶುಕ್ರವಾರ ಮೃತಪಟ್ಟಿದ್ದಾರೆ.
ಹೊಸಹಳ್ಳಿಯ ಸತೀಶ (15) ಹಾಗೂ ನಂದನ್ ಕುಮಾರ್(16) ಮೃತಪಟ್ಟವರು.
ಐವರು ಸ್ನೇಹಿತರು ಈಜಲು ತೆರಳಿದ್ದರು. ಸರಿಯಾಗಿ ಈಜು ಬಾರದ ಸತೀಶ ನೀರಿನಲ್ಲಿ ಮುಳುಗಿದ್ದಾನೆ. ಆತನನ್ನು ರಕ್ಷಿಸಲು ಹೋದ ನಂದನ್ ಕುಮಾರ್ ಮೃತಪಟ್ಟಿದ್ದಾನೆ. ಈ ಇಬ್ಬರೂ ಮುಳುಗುತ್ತಿರುವುದನ್ನು ಗಮನಿಸಿದ ಸ್ನೇಹಿತ ಆಕಾಶ್ ನೆರವಿಗೆ ಧಾವಿಸಿದ್ದಾನೆ. ಆಗ ಅಪಾಯದ ಮುನ್ಸೂಚನೆ ಅರಿತ ಮತ್ತೊಬ್ಬ ಸ್ನೇಹಿತ ಮಧುಸೂದನ, ಆಕಾಶ್ನನ್ನು ಹಿಂದಕ್ಕೆ ಎಳೆದುಕೊಂಡು ಪ್ರಾಣಾಪಾಯದಿಂದ ಪಾರು ಮಾಡಿದ್ದಾನೆ.
ನಂದನ್ ಕುಮಾರ್ ಶವವನ್ನು ಮೇಲೆತ್ತಲಾಗಿದೆ. ಸತೀಶನ ಮೃತದೇಹಕ್ಕಾಗಿ ಅಗ್ನಿಶಾಮಕ ಮತ್ತು ತುರ್ತುಸೇವಾ ಸಿಬ್ಬಂದಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಈ ದುರ್ಘಟನೆಗೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳದಲ್ಲಿ ನೆರೆದಿದ್ದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಕೆರೆ ಏರಿಯ ಕಾಮಗಾರಿ ವೇಳೆ ಗುತ್ತಿಗೆದಾರರು ಅನಧಿಕೃತವಾಗಿ ಕೆರೆಯಲ್ಲಿ ಆಳವಾದ ಗುಂಡಿಗಳನ್ನು ತೋಡಿದ್ದಾರೆ. ಗುಂಡಿಗಳಲ್ಲಿ ನೀರು ತುಂಬಿಕೊಂಡಿದ್ದು, ಬಾಲಕರು ಈಜಲು ಹೋಗಿ ಮೃತಪಟ್ಟಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.
ಘಟನಾ ಸ್ಥಳಕ್ಕೆ ಕೊರಟಗೆರೆ ಸಿಪಿಐ ಎಫ್.ಕೆ.ನದಾಫ್, ಪಿಎಸ್ಐ ಎಚ್.ಮುತ್ತುರಾಜು, ಎಎಸ್ಐ ಯೋಗೀಶ್ ಭೇಟಿ ನೀಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.