ADVERTISEMENT

ಅದ್ದೂರಿ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 19 ಜನವರಿ 2023, 5:53 IST
Last Updated 19 ಜನವರಿ 2023, 5:53 IST
ಚಿಕ್ಕನಾಯಕನಹಳ್ಳಿಯ ತಾಲೂಕು ಕಚೇರಿಯಲ್ಲಿ ಬುಧವಾರ ಗಣರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ತಹಸೀಲ್ದಾರ್‌ ತೇಜಸ್ವಿನಿ ಇದ್ದರು.
ಚಿಕ್ಕನಾಯಕನಹಳ್ಳಿಯ ತಾಲೂಕು ಕಚೇರಿಯಲ್ಲಿ ಬುಧವಾರ ಗಣರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ತಹಸೀಲ್ದಾರ್‌ ತೇಜಸ್ವಿನಿ ಇದ್ದರು.   

ಚಿಕ್ಕನಾಯಕನಹಳ್ಳಿ: ಅದ್ದೂರಿಯಾಗಿ ಗಣರಾಜ್ಯೋತ್ಸವ ಆಚರಿಸಲು ತಾಲ್ಲೂಕು ಆಡಳಿತ ತೀರ್ಮಾನಿಸಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳಲು ವಿವಿಧ ಇಲಾಖೆಗಳಿಗೆ ಸೂಚಿಸಲಾಯಿತು.

ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ತಾಲ್ಲೂಕುಮಟ್ಟದ ಅಧಿಕಾರಿಗಳು, ಸಂಘ– ಸಂಸ್ಥೆಯ ಮುಖ್ಯಸ್ಥರಿಗೆ ಕೈಗೊಳ್ಳಬೇಕಾದ ಸಿದ್ಧತೆ ಬಗ್ಗೆ ಜವಾಬ್ದಾರಿ ನೀಡಲಾಯಿತು.

ವೇದಿಕೆ ನಿರ್ಮಾಣ, ಧ್ವನಿವರ್ಧಕ ವ್ಯವಸ್ಥೆ ಮಾಡಲು ಪುರಸಭೆ ಮುಖ್ಯಾಧಿಕಾರಿ, ಸಾಂಸ್ಕೃತಿಕ ಕಾರ್ಯಕ್ರಮದ ಹೊಣೆಯನ್ನು ಬಿಇಒಗೆ ನೀಡಲಾಯಿತು. ಸಿಹಿ ಸಿದ್ಧಪಡಿಸಿ ಶಾಲಾ ಮಕ್ಕಳು, ಸಾರ್ವಜನಿಕರಿಗೆ ವಿತರಿಸುವ ಜವಾಬ್ದಾರಿಯನ್ನು ತಹಶೀಲ್ದಾರ್‌ ತೇಜಸ್ವಿನಿ ಹಾಗೂ ಸಿಪಿಐ ನಿರ್ಮಲಾ ಅವರಿಗೆ ವಹಿಸಲಾಯಿತು.

ADVERTISEMENT

ಗಣರಾಜ್ಯೋತ್ಸವ ಆಚರಣೆ ಬಗ್ಗೆ ಸರ್ಕಾರ ನೀಡಿರುವ ಸೂಚನೆಗಳನ್ನು ಆರಂಭದಲ್ಲಿ ಓದಿ ತಿಳಿಸಿದ ತಹಶೀಲ್ದಾರ್‌, ಸಚಿವ ಜೆ.ಸಿ. ಮಾಧುಸ್ವಾಮಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಪೊಲೀಸ್‌, ಗೃಹರಕ್ಷಕ ದಳ ಹಾಗೂ ಶಾಲಾ ಮಕ್ಕಳಿಂದ ಪಥ ಸಂಚಲನ ನಡೆಯಲಿದೆ. ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಿಹಿ ವಿತರಣೆ ನಡೆಯಲಿದೆ ಎಂದು ತಿಳಿಸಿದರು.

ಸಂಜೆ ಕನ್ನಡ ಸಂಘದ ವೇದಿಕೆಯಲ್ಲಿ ಭುವನೇಶ್ವರಿ ಕನ್ನಡ ಸಂಘದಿಂದ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುವುದು ಎಂದು ಸಂಘದ ಮುಖಂಡ ಶಾಂತಕುಮಾರ್‌ ಹೇಳಿದರು.

ನ್ಯಾ. ನಾಗಮೋಹನದಾಸ್‌ ಅವರ ‘ಸಂವಿಧಾನ ಓದು’ ಕೃತಿಯ ಪ್ರಚಾರ ನಿಮಿತ್ತ ಸಮಾರಂಭದಲ್ಲಿ ಸಾಂಕೇತಿಕವಾಗಿ ವಿತರಿಸಲು ತಮಗೆ ಅವಕಾಶಕೊಡಬೇಕೆಂದು ರೈತ ಸಂಘದ ತಾಲ್ಲೂಕು ಸಂಚಾಲಕ ಎ.ಎನ್‌. ಕುಮಾರಯ್ಯ ಕೋರಿದರು. ಇದಕ್ಕೆ ಶಿಷ್ಟಾಚಾರದ ಉಲ್ಲಂಘನೆಯಾಗುತ್ತದೆ ಎಂದು ಸಚಿವರು ನಿರಾಕರಿಸಿದರು.

ಕಸಾಪ ಅಧ್ಯಕ್ಷ ರವಿಕುಮಾರ್‌, ಕನ್ನಡ ಸಂಘದ ವೇದಿಕೆ ಅಧ್ಯಕ್ಷ ರೇಣುಕಸ್ವಾಮಿ, ಸಂಘಟನೆಗಳ ಮುಖಂಡರಾದ ಬೇವಿನಹಳ್ಳಿ ಚನ್ನಬಸವಯ್ಯ, ಲಿಂಗರಾಜು, ಗೋಡೆಕೆರೆ ವಸಂತಕುಮಾರ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.