ಮಧುಗಿರಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಇಳಿಮುಖವಾಗುತ್ತಿದೆ. ಹೀಗೆ ಮುಂದುವರೆದರೆ ಜೂನ್ 6ರಂದು ಜಿಲ್ಲೆಯ ಎಲ್ಲ ಶಾಸಕರ ಅಭಿಪ್ರಾಯ ಪಡೆದು ಲಾಕ್ಡೌನ್ ತೆರವಿನ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕೋವಿಡ್ ನಿಯಂತ್ರಣ ಕುರಿತ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದರು.
ಕೊರೊನಾ ಸಂಪೂರ್ಣ ನಿಯಂತ್ರಣ ಮಾಡಲು ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಮತ್ತಷ್ಟು ಶ್ರಮಿಸಬೇಕಿದೆ. ತಾಲ್ಲೂಕು ಅಸ್ಪತ್ರೆಗೆ 500 ಲೀಟರ್ ಸಾಮರ್ಥ್ಯದ ಆಮ್ಲಜನಕ ಘಟಕ ಮಂಜೂರು ಮಾಡಲಾಗಿದೆ ಎಂದರು.
ಕೋವಿಡ್ 3ನೇ ಅಲೆಯ ಸಾಧ್ಯತೆಯಿದ್ದು, ಮುಂಜಾಗ್ರತಾ ಕ್ರಮವಾಗಿ ತಾಲ್ಲೂಕಿನ ಪಿಎಚ್ಸಿ ಕೇಂದ್ರಗಳಲ್ಲಿ ಅಮ್ಲಜನಕದ ಪೈಪ್ಲೈನ್ ಅಳವಡಿಸಿ ಹೆಚ್ಚುವರಿ ಹಾಸಿಗೆ ವ್ಯವಸ್ಥೆ ಮಾಡಲಾಗುವುದು ಎಂದರು.
ಶಾಸಕ ಎಂ.ವಿ. ವೀರಭದ್ರಯ್ಯ ಮಾತನಾಡಿ, ಮಧುಗಿರಿ ತಾಲ್ಲೂಕಿಗೆ ವೈದ್ಯಕೀಯ ಕಾಲೇಜು ಮಂಜೂರು ಮಾಡಬೇಕು ಎಂದು ಸಚಿವರಿಗೆ ಮನವಿ ಮಾಡಿದರು. ಹಲವು ಬಾರಿ ಸಿದ್ದಾಪುರ ಕೆರೆಗೆ ಹೇಮಾವತಿ ನೀರು ಹರಿಸಿದ್ದಾರೆ. ಈ ವರ್ಷವು ಪೂರ್ಣ ಪ್ರಮಾಣದಲ್ಲಿ ಹರಿಸಬೇಕು ಎಂದರು.
ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣ್ ಸ್ವಾಮಿ, ಚಿದಾನಂದ್ ಎಂ.ಗೌಡ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ಸಿಇಒ ಡಾ.ಕೆ.ವಿದ್ಯಾಕುಮಾರಿ, ಎಸ್ಪಿ ಕೆ.ವಂಶಿಕೃಷ್ಣ, ಡಿಎಚ್ಒ ಡಾ.ನಾಗೇಂದ್ರಪ್ಪ, ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ, ತಹಶೀಲ್ದಾರ್ ವೈ.ರವಿ, ತಾ.ಪಂ. ಇ.ಒ. ದೊಡ್ಡಸಿದ್ದಯ್ಯ, ಟಿಎಚ್ಒ ಡಾ.ರಮೇಶ್ ಬಾಬು, ಡಾ.ಗಂಗಾಧರ್, ಸಿಪಿಐ ಎಂ.ಎಸ್.ಸರ್ದಾರ್, ಲೋಕೋಪಯೋಗಿ ಇಲಾಖೆ ಇಇ ಪ್ರಕಾಶ್, ಎಇಇ ಹೊನ್ನೇಶಪ್ಪ, ಮುಖ್ಯಾಧಿಕಾರಿ ಅಮರನಾರಾಯಣ್, ಸಿಡಿಪಿಒ ಅನಿತಾ, ಆಹಾರ ಇಲಾಖೆ ಶಿರಸ್ತೇದಾರ್ ಗಣೇಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.