ADVERTISEMENT

ನಿಗದಿತ ಗುರಿ ತಲು‍ಪಲು ಶ್ರದ್ಧೆ, ಅಭ್ಯಾಸ ಅವಶ್ಯ: ಎಚ್.ಕೆ.ಸವಿತಾ

ಪ್ರತಿಭಾ ಪುರಸ್ಕಾರ, ಶಾಲಾ ವಾರ್ಷಿಕೋತ್ಸವ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2026, 7:50 IST
Last Updated 20 ಫೆಬ್ರುವರಿ 2026, 7:50 IST
ಪಟ್ಟಣದ ವಿದ್ಯಾರಣ್ಯ ವಿದ್ಯಾಸಂಸ್ಥೆ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಶಾಲಾ ವಾರ್ಷಿಕೋತ್ಸವದಲ್ಲಿ ಪ್ರತಿಭಾವಂತರನ್ನು ಸತ್ಕರಿಸಲಾಯಿತು
ಪಟ್ಟಣದ ವಿದ್ಯಾರಣ್ಯ ವಿದ್ಯಾಸಂಸ್ಥೆ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಶಾಲಾ ವಾರ್ಷಿಕೋತ್ಸವದಲ್ಲಿ ಪ್ರತಿಭಾವಂತರನ್ನು ಸತ್ಕರಿಸಲಾಯಿತು   

ತುರುವೇಕೆರೆ: ಕಳೆದ ವರ್ಷದ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ತುರುವೇಕೆರೆ ಜಿಲ್ಲೆಗೆ ಎರಡನೇ ಸ್ಥಾನ ಲಭಿಸಿತ್ತು. ಈ ಬಾರಿ ಪ್ರಥಮ ಸ್ಥಾನ ಪಡೆಯುವ ನಿಟ್ಟಿನಲ್ಲಿ ಎಲ್ಲ ಶಿಕ್ಷಕರು ಮತ್ತು ಅಧಿಕಾರಿಗಳು ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ ಎಂದು ತಾಲ್ಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಎಚ್.ಕೆ.ಸವಿತಾ ಅಭಿಪ್ರಾಯಪಟ್ಟರು.

ಪಟ್ಟಣದ ವಿದ್ಯಾರಣ್ಯ ವಿದ್ಯಾಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ವಿದ್ಯಾರಣ್ಯ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದಲ್ಲಿ ಎಸ್.ಎಸ್.ಎಲ್.ಸಿ ಅತಿಮುಖ್ಯ ಹಂತವಾಗಿದೆ. ಈ ಹಂತದಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾದರೆ ಮುಂದಿನ ಶಿಕ್ಷಣ ಉತ್ತಮವಾಗಿರುತ್ತದೆ. ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಆಸಕ್ತಿಯಿಂದ ನಿರಂತರ ಅಭ್ಯಾಸ ಮಾಡಬೇಕು. ಪರೀಕ್ಷಾ ಸಮಯ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ಜಾತ್ರೆ, ಉತ್ಸವ ಮುಂತಾದ ಕಾರ್ಯಕ್ರಮಗಳಿಗೆ ಕಳುಹಿಸದಿರಬೇಕು ಎಂದು ಸಲಹೆ ನೀಡಿದರು.

ADVERTISEMENT

ವಿದ್ಯಾರಣ್ಯ ಸಂಸ್ಥೆ ಕಳೆದ ಬಾರಿ ಶೇ80ರಷ್ಟು ಫಲಿತಾಂಶ ಪಡೆದು ಉತ್ತಮ ಸ್ಥಾನ ಗಳಿಸಿದೆ. ಉತ್ತರ ಕರ್ನಾಟಕದಿಂದ ಸಾಕಷ್ಟು ಬಡ ವಿದ್ಯಾರ್ಥಿಗಳು ಇಲ್ಲಿಗೆ ಬಂದು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅವರಿಗೆ ಶಾಲೆ ವತಿಯಿಂದ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕಾರ್ಯಕ್ರಮದಲ್ಲಿ ಇಸಿಒ ಸಿದ್ದಪ್ಪ, ವಿದ್ಯಾರಣ್ಯ ವಿದ್ಯಾಸಂಸ್ಥೆ ಕಾರ್ಯದರ್ಶಿ ಕೀರ್ತಿಶ್ರೀ ಯೋಗೀಶ್, ಸಂಸ್ಥೆ ಮುಖ್ಯಸ್ಥ ಜಯಣ್ಣ, ಹಿಂದುಳಿದ ವರ್ಗಗಳ ಇಲಾಖೆ ವಿಸ್ತರಣಾಧಿಕಾರಿ ದೊಡ್ಡೇಗೌಡ, ತುರುವೇಕೆರೆ ಟೌನ್ ಬಿಆರ್‌ಪಿ ಹಾಗೂ ಸಿಆರ್‌ಪಿ ಕೆ.ಎನ್.ಸುರೇಶ್, ಶಿಕ್ಷಣ ಸಂಯೋಜಕ ಜಗದೀಶ್, ದೀಪು, ಶಾಲೆ ಮುಖ್ಯ ಶಿಕ್ಷಕ ನಟೇಶ್, ಮುಖ್ಯ ಶಿಕ್ಷಕರಾದ ಗೋಪಾಲ್, ವೆಂಕಟೇಶ್ ಬಾಬು, ಲಾಲಪ್ಪನಾಯಕ, ಮಧುಶ್ರೀ, ಸುನಿತ, ಆನಂದ್ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.