ಮಧುಗಿರಿ: ತಾಲ್ಲೂಕಿನ ವೀರಣ್ಣನಹಳ್ಳಿ ಸಮೀಪ ಕಲ್ಲು ಗಣಿಗಾರಿಕೆಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ, ಗ್ರಾಮಸ್ಥರು ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ ಅವರಿಗೆ ಗುರುವಾರ ಮನವಿಸಲ್ಲಿಸಿದರು.
ತಾಲ್ಲೂಕಿನ ಕಸಬಾ ವ್ಯಾಪ್ತಿಯ ವೀರಣ್ಣನಹಳ್ಳಿ ಗ್ರಾಮದ ಸರ್ವೆ ನಂಬರ್ 25ರಲ್ಲಿ ಅಲಂಕಾರಿಕ ಶಿಲೆ ಗಣಿಗಾರಿಕೆಗೆ ಅವಕಾಶ ನೀಡಬಾರದು ಎಂದು ಕನಕಪುರದ ಶಿವಮ್ಮ, ರಾಜೇಶ್ ಹಾಗೂ ರಮೇಶ್ ‘ತಲಾ 10 ಎಕರೆ ಮಂಜೂರು ಮಾಡಿಕೊಡಬೇಕು ಎಂದು ಅರ್ಜಿ ಹಾಕಿದ್ದಾರೆ. ಆದರೆ ಕಂದಾಯ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಿಗರು ಗ್ರಾಮದ ಮಹಜರ್ಗೆ ನಕಲಿ ಸಹಿಗಳನ್ನು ನಮೂದಿಸಿ ಗಣಿಗಾರಿಕೆಗೆ ಅವಕಾಶ ನೀಡಬಹುದು ಎಂದು ವರದಿ ನೀಡಿದ್ದಾರೆ. ಈ ಭಾಗದಲ್ಲಿ ಹಲವಾರು ವರ್ಷಗಳಿಂದ ಭೂಮಿಯನ್ನು ನಂಬಿಕೊಂಡು ಜಾನುವಾರುಗಳನ್ನು ಕಟ್ಟಿಕೊಂಡು ಜೀವ ನಡೆಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಕಲ್ಲು ಗಣಿಗಾರಿಕೆ ಅವಕಾಶ ನೀಡಬಾರದು’ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ ಮಾತನಾಡಿ, ಈ ವರದಿಯನ್ನು ಪರಿಶೀಲನೆ ಹಾಗೂ ಸ್ಥಳ ವೀಕ್ಷಣೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಮುಖಂಡರಾದ ಬಿ.ಎಸ್.ಶ್ರೀನಿವಾಸ್, ಗೋಪಾಲ್, ಗುಂಡನಾಯ್ಕ್, ಗೌರಮ್ಮ, ರಾಜನಾಯ್ಕ್, ಕೃಷ್ಣ ನಾಯ್ಕ್, ಸತೀಶ್ ನಾಯ್ಕ್, ನಾಗಮ್ಮ, ಸುಬ್ಬರಾಯ, ರಾಮಕ್ಕ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.