ತಿಪಟೂರು: ‘ಕಾಡುಗೊಲ್ಲ ಜನಾಂಗ ತೀರಾ ಹಿಂದುಳಿದಿದೆ. ಈ ಸಮುದಾಯವನ್ನು ಎಸ್.ಟಿ ವರ್ಗಕ್ಕೆ ಸೇರುವುದು ಸಂಘದ ಪ್ರಮುಖ ಗುರಿಯಾಗಿದೆ. ಈ ನಿಟ್ಟಿನಲ್ಲಿ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆಯಿದೆ’ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ರಾಜಣ್ಣ ತಿಳಿಸಿದರು.
ನಗರದ ಬಯಲು ರಂಗಮಂದಿರದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಕಾಡುಗೊಲ್ಲ ಸಂಘದ ತಿಪಟೂರು ಘಟಕದಿಂದ ಹಮ್ಮಿಕೊಂಡಿದ್ದ ಜನಜಾಗೃತಿ ಹಾಗೂ ಎಸ್.ಟಿ ವರ್ಗಕ್ಕೆ ಸಮುದಾಯ ಸೇರಿಸುವ ಹಕ್ಕೊತ್ತಾಯ ಸಮಾವೇಶ, ತಾಲ್ಲೂಕು ಘಟಕದ ಉದ್ಘಾಟನೆ, ಪದಾಧಿಕಾರಿಗಳ ನೇಮಕ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಾಡುಗೊಲ್ಲ ಜನಾಂಗವನ್ನು ಎಸ್.ಟಿಗೆ ಸೇರಿಸುವ ಪ್ರಯತ್ನವನ್ನು ಈ ಹಿಂದಿನಿಂದಲೂ ಮಾಡಿಕೊಂಡು ಬಂದಿದ್ದೇವೆ. ಆದರೆ, ಸರಿಯಾದ ಕಾನೂನಾತ್ಮಕ ಬೆಂಬಲ ದೊರಕುತ್ತಿಲ್ಲ. ರಾಜಕೀಯವಾಗಿ ನೆರವು ಸಿಗುತ್ತಿಲ್ಲ. ಮುಂದಿನ ದಿನಗಳಲ್ಲಿ ಸ್ವಂತ ಶಕ್ತಿ ಮೇಲೆ ಗುರಿ ತಲುಪಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.
ಕಾಡುಗೊಲ್ಲರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಕಾಡುಗೊಲ್ಲ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ಹಣ ಬಿಡುಗಡೆ ಮಾಡಿದ್ದರು. ಸರ್ಕಾರದ ಈ ನಡೆಗೆ ಕಾಡುಗೊಲ್ಲ ಸಂಘ ಅಭಿನಂದನೆ ಸಲ್ಲಿಸುತ್ತದೆ ಎಂದುತಿಳಿಸಿದರು.
ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಹೆಚ್ಚಿನ ನೆರವು ನೀಡಲಾಗುವುದು. ಕಾಡುಗೊಲ್ಲರನ್ನು ಮುಖ್ಯವಾಹಿನಿಗೆ ತರಲು ಒತ್ತು ನೀಡಲಾಗುವುದು ಎಂದರು.
ಮಾಜಿ ಶಾಸಕ ಕೆ. ಷಡಕ್ಷರಿ ಮಾತನಾಡಿ, ಕಾಡುಗೊಲ್ಲ ಸಮುದಾಯವು ಹಿಂದುಳಿದ ವರ್ಗವಾಗಿದೆ. ಅನೇಕ ಮೂಢನಂಬಿಕೆಗಳನ್ನು ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಈ ಸಮುದಾಯವನ್ನು ಮುಖ್ಯವಾಹಿನಿಗೆ ಬರಬೇಕಾದರೆ ಸರ್ಕಾರದ ನೆರವು ಬೇಕು ಎಂದು ಹೇಳಿದರು.
ತಾ.ಪಂ.ಮಾಜಿ ಅಧ್ಯಕ್ಷ ಶಂಕರಪ್ಪ, ಕುಮಾರ ಆಸ್ಪತ್ರೆಯ ಡಾ.ಶ್ರೀಧರ್, ಸಂಘದ ತಾಲ್ಲೂಕು ಅಧ್ಯಕ್ಷ ಬಾಲರಾಜು, ಸಂಘದ ರಾಜ್ಯ ಉಪಾಧ್ಯಕ್ಷ ಮೀಸೆ ಮಹಾಲಿಂಗಪ್ಪ, ಜಿಲ್ಲಾ ಅಧ್ಯಕ್ಷ ಶಿವಣ್ಣ, ಎಸಿಪಿ ಬಸವರಾಜು, ನೇತ್ರಾಧಿಕಾರಿ ಯುವರಾಜು, ಕಾಂಗ್ರೆಸ್ ಮುಖಂಡರಾದ ಟೂಡಾ ಶಶಿಧರ್, ಕೆ.ಟಿ. ಶಾಂತ್ಕುಮಾರ್, ಶಿವಪ್ಪ, ನಗರಸಭೆ ಮಾಜಿ ಅಧ್ಯಕ್ಷ ಪ್ರಕಾಶ್, ಅಯ್ಯಣ್ಣ, ಕುಮಾರ ಯಾದವ್, ನರಸಿಂಹಯ್ಯ, ತರಕಾರಿ ಕಿಟ್ಟಿ, ಪ್ರಕಾಶ್ ಯಾದವ್, ಮಂಜುನಾಥ್, ತಿಲಕ್ಗೌಡ, ಪ್ರಭು, ರೇಣುಕಯ್ಯ, ಕೃಷ್ಣಮೂರ್ತಿ, ಲಿಂಗರಾಜು, ತಮ್ಮಯ್ಯ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.