ತುಮಕೂರು: ಹಿರೇಹಳ್ಳಿ, ಅಂತರಸನಹಳ್ಳಿ, ಸತ್ಯಮಂಗಲ ಬಳಿ ಪೊಲೀಸ್ ಔಟ್ಪೋಸ್ಟ್ ತೆರೆಯಬೇಕು. ಪೊಲೀಸ್ ಗಸ್ತು ಹೆಚ್ಚಿಸಬೇಕು ಎಂದು ಕೈಗಾರಿಕೋದ್ಯಮಿಗಳು ಒತ್ತಾಯಿಸಿದರು.
ನಗರದಲ್ಲಿ ಬುಧವಾರ ನಡೆದ ಕೈಗಾರಿಕೋದ್ಯಮಿಗಳ ಕುಂದು ಕೊರತೆ, ಸಂವಾದ ಸಭೆಯಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.
ಸತ್ಯಮಂಗಲ ಕೈಗಾರಿಕಾ ಪ್ರದೇಶ ಬಳಿ ಲಾರಿಗಳನ್ನು ರಸ್ತೆಯಲ್ಲೇ ನಿಲ್ಲಿಸಲಾಗುತ್ತದೆ. ಇತರೆ ವಾಹನಗಳ ಓಡಾಟಕ್ಕೆ ಕಷ್ಟವಾಗುತ್ತಿದೆ. ಕಾರ್ಮಿಕರು ನಡೆದುಕೊಂಡು ಹೋಗಲು ಆಗುತ್ತಿಲ್ಲ. ಲಾರಿ ನಿಲ್ಲಿಸದಂತೆ ಅಗತ್ಯ ಕ್ರಮ ವಹಿಸಬೇಕು. ಕೈಗಾರಿಕಾ ಪ್ರದೇಶಗಳಲ್ಲಿ ಹೈಮಾಸ್ಟ್ ದೀಪಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಇದರಿಂದಾಗಿ ತೊಂದರೆಯಾಗುತ್ತಿದೆ ಎಂದು ಅಳಲು ತೋಡಿಕೊಂಡರು.
ಕೈಗಾರಿಕಾ ಪ್ರದೇಶದ ರಸ್ತೆಯ ತಿರುವುಗಳಲ್ಲಿ ನಾಮಫಲಕ ಅಳವಡಿಸಬೇಕು. ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಿಂದ ಮಧುಗಿರಿ ಮುಖ್ಯರಸ್ತೆಗೆ ಹೋಗುವಾಗ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ರಸ್ತೆ ಉಬ್ಬು ನಿರ್ಮಿಸಬೇಕು ಎಂದು ಮನವಿ ಮಾಡಿದರು.
ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ‘ಕೈಗಾರಿಕಾ ಪ್ರದೇಶಗಳ ಸುರಕ್ಷತೆಗೆ ಅಗತ್ಯ ಭದ್ರತೆ ಒದಗಿಸಲಾಗುವುದು. ಸೂಕ್ತ ಸ್ಥಳ ನೀಡಿದರೆ ಔಟ್ ಪೋಸ್ಟ್ ಸ್ಥಾಪಿಸಲಾಗುವುದು. ರೌಡಿಗಳು, ಗೂಂಡಾಗಳು, ಹಫ್ತಾ ವಸೂಲಿ, ಬ್ಲಾಕ್ಮೇಲ್ ಮಾಡುವ ವ್ಯಕ್ತಿಗಳು ಕಂಡು ಬಂದಲ್ಲಿ ತಕ್ಷಣ ಮಾಹಿತಿ ನೀಡಬೇಕು’ ಎಂದು ಸೂಚಿಸಿದರು.
ಕೈಗಾರಿಕಾ ಪ್ರದೇಶದಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಸಲಾಗುವುದು. ಸಂಜೆಯ ನಂತರ ಕಳ್ಳತನ, ಕುಡುಕರ ಹಾವಳಿ ಹೆಚ್ಚಾಗಿದ್ದು, ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಪಿ.ಆರ್.ಕುರಂದವಾಡ, ಉಪಾಧ್ಯಕ್ಷ ಸಿ.ಎಸ್.ಸಂಜಯ್, ಗೌರವ ಕಾರ್ಯದರ್ಶಿ ಟಿ.ಎನ್.ಶ್ರೀಕಂಠಸ್ವಾಮಿ, ಜಂಟಿ ಕಾರ್ಯದರ್ಶಿ ಎಂ.ಎಸ್.ಉಮೇಶಯ್ಯ, ಖಜಾಂಚಿ ರವಿಶಂಕರ್ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.