ತುಮಕೂರು: ‘ದೇವರ ದಾಸಿಮಯ್ಯ ಅವರು ಮಹಿಳಾ ಶಿಕ್ಷಣ ಮತ್ತು ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿದ್ದರು’ ಎಂದು ನೇಕಾರರ ಒಕ್ಕೂಟದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಆರ್.ರಾಮಕೃಷ್ಣಪ್ಪ ಹೇಳಿದರು.
ನಗರದಲ್ಲಿ ಭಾನುವಾರ ಜಿಲ್ಲಾ ಆಡಳಿತ, ನೇಕಾರರ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಹಮ್ಮಿಕೊಂಡಿದ್ದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸರ್ಕಾರ ರೈತರ ರೀತಿ ನೇಕಾರರಿಗೂ ಕಡಿಮೆ ಬಡ್ಡಿಯಲ್ಲಿ ಸಾಲ ನೀಡಬೇಕು. ನೇಕಾರರ ಸಾಲ ಮನ್ನಾ ಮಾಡಿ, ಬದುಕಿಗೆ ನೆರವಾಗಬೇಕು ಎಂದು ಮನವಿ ಮಾಡಿದರು.
ನೇಕಾರರ ಒಕ್ಕೂಟ ಜಿಲ್ಲಾ ಘಟಕದ ಅಧ್ಯಕ್ಷ ಧನಿಯಾಕುಮಾರ್, ‘ನೇಕಾರರ ಸಮುದಾಯ ಭವನಗಳ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ಬಾಕಿ ಕಾಮಗಾರಿ ಪೂರ್ಣಗೊಳಿಸಲು ಹೆಚ್ಚಿನ ಅನುದಾನ ಬೇಕಿದ್ದು, ಸರ್ಕಾರ ಇತ್ತ ಗಮನ ಹರಿಸಬೇಕು’ ಎಂದು ಒತ್ತಾಯಿಸಿದರು.
ಶಾಸಕ ಜಿ.ಬಿ. ಜ್ಯೋತಿಗಣೇಶ್, ‘ಇಂದು ಮಧ್ಯವರ್ತಿಗಳ ಹಾವಳಿಯಿಂದ ನೇಕಾರಿಕೆ ಲಾಭದಾಯಕವಾಗಿಲ್ಲ. ಸರ್ಕಾರದಿಂದ ನೇಕಾರರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿದೆ’ ಎಂದರು.
ನೇಕಾರರ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಲಿಂಗರಾಜು, ಸಮುದಾಯದ ಮುಖಂಡರಾದ ಎಸ್.ವಿ. ವೆಂಕಟೇಶ್ ರವೀಂದ್ರ, ಕೆ.ಎಚ್. ರಾಮಸ್ವಾಮಿ, ರಾಘವ, ಡಿ.ಪಿ. ಶಾಮಣ್ಣ, ಕ್ರೀಡಾಪಟು ನರೇಶ್ ಇತರರು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.