ಶಿರಾ: ರಾಜ್ಯದ 130 ತಾಲ್ಲೂಕು ಪ್ರವಾಹ ಪೀಡಿತ ಎಂದು ಘೋಷಿಸಲಾಗಿದೆ. ಕೇಂದ್ರ ತಂಡ ಬಂದು ಪರಿಶೀಲನೆ ನಡೆಸಿದ್ದು, ಒಟ್ಟು 8,071 ಕೋಟಿ ನಷ್ಟವಾಗಿದೆ ಎಂದು ಕೇಂದ್ರಕ್ಕೆ ವರದಿ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.
ನಗರದಲ್ಲಿ ₹ 9.85 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮಿನಿ ವಿಧಾನಸೌಧ ಉದ್ಘಾಟಿಸಿ ಮಾತನಾಡಿದರು.
ಕೆಲವರು ಅಧಿಕಾರಕ್ಕೆ ಬಂದರೆ ಬರಗಾಲ ಬರುತ್ತದೆ. ಯಡಿಯೂರಪ್ಪ ಮುಖ್ಯಮಂತ್ರಿಯಾದರೆ ಜಲಾಶಯ ಭರ್ತಿಯಾಗುತ್ತವೆ. ಕೊರೊನಾ, ಪ್ರವಾಹದಿಂದ ಸಂಕಷ್ಟಕ್ಕೆ ಗುರಿಯಾಗಿದ್ದು, ಸಾಲ ಮಾಡಿಯಾದರೂ ಅಭಿವೃದ್ಧಿ ಕಾರ್ಯ ಮಾಡಲಾಗುವುದು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ‘ಮಿನಿ ವಿಧಾನಸೌಧದ ಕಟ್ಟಡ ದೊಡ್ಡದಿದೆ. ಹಾಗಾಗಿ ಪೀಠೋಪಕರಣದ ಕೊರತೆ ಕಾಣುತ್ತಿದೆ. ಆದರೆ ಅದನ್ನು ದೊಡ್ಡದು ಮಾಡುವುದು ಬೇಡ. ಕಟ್ಟಡ ದೊಡ್ಡದಾದರೆ ಸಾಲದು ಇಲ್ಲಿ ಕೆಲಸ ಮಾಡುವವರ ಮನಸ್ಸು ದೊಡ್ಡದಾಗಬೇಕು’ ಎಂದರು.
ಸಾಮಾಜಿಕ ಭದ್ರತಾ ಯೋಜನೆಯಡಿಯಲ್ಲಿ ಕೆಲವರಿಗೆ ಪಿಂಚಣಿ ದೊರೆಯುತ್ತಿಲ್ಲ ಎನ್ನುವ ದೂರು ಕೇಳಿ ಬರುತ್ತಿವೆ. ಆಧಾರ್ ಕಾರ್ಡ್ ಲಿಂಕ್ ಆಗದಿರುವುದು ಸೇರಿದಂತೆ ತಾಂತ್ರಿಕ ಸಮಸ್ಯೆಯಿಂದ ಪಿಂಚಣಿ ಸ್ಥಗಿತವಾಗಿದೆ. ಶೀಘ್ರ ಇದನ್ನು ಸರಿ ಪಡಿಸಲಾಗುವುದು ಎಂದರು.
ಅರಣ್ಯ ಸಚಿವ ಆನಂದ್ ಸಿಂಗ್, ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ರವಿಕುಮಾರ್, ತಾ.ಪಂ ಅಧ್ಯಕ್ಷ ಚಂದ್ರಯ್ಯ, ಉಪಾಧ್ಯಕ್ಷ ರಂಗನಾಥ ಗೌಡ, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಚನ್ನಬಸಪ್ಪ, ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಜಿ.ಪಂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ, ತಹಶೀಲ್ದಾರ್ ನಾಹಿದಾ ಜಮ್ ಜಮ್, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ಬಿ.ಕೆ.ಮಂಜುನಾಥ್, ಚಿದಾನಂದ ಎಂ.ಗೌಡ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.