ತುಮಕೂರು: ಪಾವಗಡ ತಾಲ್ಲೂಕು ಅಚ್ಚಮ್ಮನಹಳ್ಳಿ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮೇಗಲಹಳ್ಳಿಯಲ್ಲಿರುವ ಎಲ್ಲ ಮನೆಗಳ ಬಾಗಿಲಿಗೆ ಕುಡಿಯುವ ನೀರನ್ನು ಕ್ಯಾನ್ ಮೂಲಕ ಸರಬರಾಜು ಮಾಡಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ನಿರ್ದೇಶನ ನೀಡಿದರು.
ಮಂಗಳವಾರ ಪಾವಗಡ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮೇಗಲಹಳ್ಳಿ ಆರ್.ಓ.ಪ್ಲಾಂಟ್ ಕೆಟ್ಟು ಹೋಗಿದೆ. ಗ್ರಾಮಸ್ಥರು 1 ಕಿ.ಮೀ. ದೂರದಿಂದ ಕುಡಿಯುವ ನೀರು ತರುತ್ತಿರುವ ಬಗ್ಗೆ ಕಳೆದ ಫೆಬ್ರುವರಿ 2 ರಂದು ಜಿಲ್ಲಾ ಪಂಚಾಯಿತಿಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಬರ ಪರಿಶೀಲನಾ ಸಭೆಯಲ್ಲಿ ಚರ್ಚೆಯಾಗಿತ್ತು.
ಕೂಡಲೇ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳು ಸೂಚಿಸಿದ್ದರ ಪರಿಣಾಮ ಮೇಗಳಹಳ್ಳಿ ಗ್ರಾಮದ ಮನೆಗಳ ಬಾಗಿಲಿಗೆ 20 ಹೊಸ ಕ್ಯಾನ್ ಖರೀದಿಸಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಮೂಲಕ ಸಮಸ್ಯೆಯನ್ನು ಬಗೆಹರಿಸಲಾಗಿದೆ ಎಂದು ತಿಳಿಸಿದರು.
ಘಟಕವನ್ನು 3 ದಿನಗಳೊಳಗಾಗಿ ದುರಸ್ಥಿಪಡಿಸಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.