ADVERTISEMENT

‘ವೈದ್ಯರ ನಡೆ ಹಳ್ಳಿ ಕಡೆ’ಗೆ ಚಾಲನೆ

ಶಿವಸಂದ್ರ ಗ್ರಾಮಕ್ಕೆ ತಹಶೀಲ್ದಾರ್‌ ಭೇಟಿ

​ಪ್ರಜಾವಾಣಿ ವಾರ್ತೆ
Published 1 ಜೂನ್ 2021, 2:47 IST
Last Updated 1 ಜೂನ್ 2021, 2:47 IST
ಗುಬ್ಬಿಯಲ್ಲಿ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ತಹಶೀಲ್ದಾರ್ ಡಾ.ಪ್ರದೀಪ್ ಕುಮಾರ್ ಹಿರೇಮಠ ಹಾಗೂ ಡಾ.ಬಿಂದು ಮಾಧವ್
ಗುಬ್ಬಿಯಲ್ಲಿ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ತಹಶೀಲ್ದಾರ್ ಡಾ.ಪ್ರದೀಪ್ ಕುಮಾರ್ ಹಿರೇಮಠ ಹಾಗೂ ಡಾ.ಬಿಂದು ಮಾಧವ್   

ಗುಬ್ಬಿ: ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಮೂಲಕ ಸೋಂಕು ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ತಹಶೀಲ್ದಾರ್ ಡಾ.ಪ್ರದೀಪ್ ಕುಮಾರ್ ಹಿರೇಮಠ ತಿಳಿಸಿದರು.

ತಾಲ್ಲೂಕಿನ ಶಿವಸಂದ್ರ ಗ್ರಾಮಕ್ಕೆ ಆರೋಗ್ಯ ಸಿಬ್ಬಂದಿಯೊಂದಿಗೆ ಭೇಟಿ ನೀಡಿ ಗ್ರಾಮದ ಜನರ ಕೊರೊನಾ ಪರೀಕ್ಷೆ ಹಾಗೂ ಜಾಗ್ರತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ತಾಲ್ಲೂಕಿನ ಹಾಟ್‌ಸ್ಪಾಟ್ ಹಾಗೂ ಕೆಂಪು ವಲಯದಲ್ಲಿ ಹೊಸದಾಗಿ ಸೋಂಕಿನ ಪ್ರಕರಣಗಳು ಕಂಡುಬಂದ ತಕ್ಷಣ ಅಲ್ಲಿಗೆ ತಾಲ್ಲೂಕು ಆರೋಗ್ಯಾಧಿಕಾರಿ ಸೇರಿದಂತೆ ಆರೋಗ್ಯ ಸಿಬ್ಬಂದಿ ತಂಡ ಭೇಟಿ ನೀಡಿ ಪರೀಕ್ಷೆ ನಡೆಸಲಾಗುತ್ತದೆ. ಸೋಂಕು ದೃಢವಾದಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿ ಇರುವವರನ್ನು ಸಹ ಪರೀಕ್ಷೆ ಮಾಡಿಸಲಾಗುತ್ತದೆ. ತಕ್ಷಣದಿಂದಲೇ ಚಿಕಿತ್ಸೆ ನೀಡಲು ಪ್ರಾರಂಭಿಸಲಾಗುತ್ತದೆ ಎಂದು ತಿಳಿಸಿದರು.

ADVERTISEMENT

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿಂದು ಮಾಧವ ಮಾತನಾಡಿ, ಈಗ ಸ್ವಲ್ಪ ಪ್ರಮಾಣದಲ್ಲಿ ಸೋಂಕು ಇಳಿಕೆ ಕಾಣುತ್ತಿದೆ. ಆದರೂ ಎಚ್ಚರಿಕೆಯಿಂದ ಇರುವುದು ಅಗತ್ಯ. ತಾಲ್ಲೂಕಿನಲ್ಲಿ ಇದುವರೆಗೂ ಒಂದು ಮಾತ್ರ ಬ್ಲ್ಯಾಕ್ ಫಂಗಸ್ ಪ್ರಕರಣ ಕಾಣಿಸಿಕೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ಗ್ರಾಮದಲ್ಲಿ ಪರೀಕ್ಷೆ ಮಾಡಲು ಸಹ ನಮ್ಮ ತಂಡ ಸಿದ್ಧವಿದೆ. ಕೊರೊನಾ ಲಕ್ಷಣ ಕಂಡುಬಂದಲ್ಲಿ ಕೂಡಲೇ ತಪಾಸಣೆ ಮಾಡಿಸಬೇಕು ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿದ್ದರಾಜು ಮಾತನಾಡಿ, ಪಂಚಾಯಿತಿ ವ್ಯಾಪ್ತಿಯಲ್ಲಿ ಸೋಂಕು ಕಾಣಿಸಿಕೊಂಡ ಕೂಡಲೇ ಆ ಗ್ರಾಮದಲ್ಲಿ ಸ್ಯಾನಿಟೈಜ್‌ ಮಾಡುವ ಜೊತೆಗೆ ಮುಂಜಾಗ್ರತಾ ಕ್ರಮವಹಿಸಲಾಗುತ್ತದೆ. ಸೋಂಕಿತ ವ್ಯಕ್ತಿಗಳನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ಕಳಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಆರೋಗ್ಯ ಸಿಬ್ಬಂದಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.