ಶಿರಾ: ‘ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಶಿಕ್ಷಣ ದೊರಕಿಸಿಕೊಡಲು ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಅಗತ್ಯವಿರುವ ಕಡೆ ಹೊಸ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುವುದು’ ಎಂದು ಶಾಸಕ ಡಾ.ಸಿ.ಎಂ. ರಾಜೇಶ್ ಗೌಡ
ಹೇಳಿದರು.
ತಾಲ್ಲೂಕಿನ ಹೆಂದೊರೆ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ನೂತನ ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕ್ಷೇತ್ರದಲ್ಲಿ ಸುಮಾರು ₹ 5 ಕೋಟಿ ವೆಚ್ಚದಲ್ಲಿ 40ಕ್ಕೂ ಹೆಚ್ಚು ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಶಿಥಿಲವಾಗಿದ್ದ ಕೊಠಡಿಗಳನ್ನು ಗುರುತಿಸಿ ಅಗತ್ಯವಿರುವ ಕಡೆ ದುರಸ್ತಿ ಮಾಡಲಾಗುವುದು. ಇನ್ನು ಕೆಲವು ಕಡೆ ಹೊಸ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದರು.
ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚು ಒತ್ತು ನೀಡಲಾಗಿದೆ. ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಒದಗಿಸಲಾಗುತ್ತಿದೆ. ಇದುವರೆಗೂ ರಸ್ತೆ ಕಾಣದ ಗ್ರಾಮಗಳಲ್ಲಿ ಸಿ.ಸಿ ರಸ್ತೆ ನಿರ್ಮಾಣ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಹೆಂದೊರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ವೇತಶ್ರೀ ನವೀನ್, ಉಪಾಧ್ಯಕ್ಷ ಎಚ್.ಕೆ. ಕುಮಾರ್, ಕೆಡಿಪಿ ಸದಸ್ಯ ನಾಗರಾಜು, ಗ್ರಾ.ಪಂ. ಸದಸ್ಯರಾದ ಸರಸ್ವತಿ ಮಂಜುನಾಥ್, ಶಿವಣ್ಣ, ಸಣ್ಣಗುಂಡಪ್ಪ, ಭೂಕಾಂತಯ್ಯ, ಗುಮ್ಮನಹಳ್ಳಿ ಈರಣ್ಣ, ಗೊಲ್ಲರಹಳ್ಳಿ ಆನಂದ್, ಸಣ್ಣ ಮಂಜುನಾಥ್, ಪಿಡಿಒ ತಿಪ್ಪೇಸ್ವಾಮಿ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.