ತಿಪಟೂರು: ‘ಪ್ರತಿ ಮಕ್ಕಳಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಅದಕ್ಕೆ ಅನುಗುಣವಾಗಿ ಮಾರ್ಗದರ್ಶನ ನೀಡಿ ಪ್ರತಿಭೆಯನ್ನು ಅನಾವರಣ ಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಹಕಾರಿಯಾಗಲಿದೆ’ ಎಂದು ಸ್ಪಂದನಾ ಟ್ರಸ್ಟ್ನ ವೀಣಾ ಬಿ.ಸಿ. ನಾಗೇಶ್ ತಿಳಿಸಿದರು.
ನಗರದ ಗುರುಕುಲಾನಂದಾಶ್ರಮ ಪ್ರೌಢಶಾಲಾ ಆವರಣದಲ್ಲಿ ಭಾನುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಭವನ ಸೊಸೈಟಿ ಹಾಗೂ ಸಗಡಯ ಜನಪದ ಹೆಜ್ಜೆ ಸಹಯೋಗದೊಂದಿಗೆ ತಾಲ್ಲೂಕಿನ 5 ರಿಂದ 16 ವರ್ಷದ ಮಕ್ಕಳಿಗೆ ಏರ್ಪಡಿಸಿರುವ ಬೇಸಿಗೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಿಗೆ ಸ್ಫೂರ್ತಿ, ಚೈತನ್ಯ ತುಂಬಲು ಇಂತಹ ಕಾರ್ಯಕ್ರಮಗಳು ಅವಶ್ಯಕವಾಗಿವೆ. ಇದನ್ನು ಬಳಸಿಕೊಂಡು ತಮ್ಮಲ್ಲಿರುವ ಪ್ರತಿಭೆ ಪ್ರದರ್ಶಿಸಿ ಎಲ್ಲರ ಗಮನ ಸೆಳೆಯಬೇಕು. ಮಕ್ಕಳಿಗೆ ಪೋಷಕರು, ಶಿಕ್ಷಕರು ಪ್ರೋತ್ಸಾಹ ನೀಡಿದರೆ ತಕ್ಕ ಪ್ರತಿಫಲ ಸಿಗಲಿದೆ ಎಂದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪಿ. ಓಂಕಾರಪ್ಪ ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರುವ ದೃಷ್ಟಿಯಿಂದ ಪ್ರತಿವರ್ಷ ಮಕ್ಕಳ ಬೇಸಿಗೆ ಶಿಬಿರ ನಡೆಸಲಾಗುತ್ತಿದೆ. ಅವರಲ್ಲಿರುವ ಪ್ರತಿಭೆಗೆ ಗೌರವ ನೀಡಿ ಉಳಿಸಿ ಬೆಳೆಸಿ ಪ್ರೋತ್ಸಾಹ ನೀಡುವ ಸಲುವಾಗಿ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕಲ್ಲುಮನೆ ಎ.ಎಸ್. ನಂಜಪ್ಪ ಮೃದಂಗ ನುಡಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಬಿ.ಎಸ್. ನಂದಕುಮಾರ್, ಸೊಗಡು ಜನಪದ ಹೆಜ್ಜೆ ಅಧ್ಯಕ್ಷ ಗುರುಮೂರ್ತಿ, ಭಾಗವತರಾದ ಪುಟ್ಟಸ್ವಾಮಿ, ಕಾಂತರಾಜು, ಸಂಗೀತ ಶಿಕ್ಷಕಿ ಸ್ವರ್ಣ ರಮೇಶ್, ಉಪನ್ಯಾಸಕ ಡಾ.ಎಲ್.ಎಂ. ವೆಂಕಟೇಶ್, ಹಿರಿಯ ಮೇಲ್ವಿಚಾರಕಿ ಮೀನಾಕ್ಷಿ ಬಟ್ಟೂರು, ಬಿ.ಎನ್. ಪ್ರೇಮಾ, ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.