ಗುಬ್ಬಿ: ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸುತ್ತಿರುವ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದಲೇ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಸಚಿವರು ಹಾಗೂ ಮುಖಂಡರ ಮೇಲೆ ಇ.ಡಿ. ದಾಳಿ ನಡೆಸಲು ಮುಂದಾಗಿರುವುದು ದುರಾದೃಷ್ಟಕರ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ಹೇಳಿದರು.
ನಿಟ್ಟೂರು ಹೋಬಳಿ ಹಂಡನಹಳ್ಳಿಯಲ್ಲಿ ಗುರುವಾರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಸಭ್ಯ ಹಾಗೂ ಪ್ರಾಮಾಣಿಕ ರಾಜಕಾರಣಿಯಾಗಿರುವ ಜಿ. ಪರಮೇಶ್ವರ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ರಾಜಕೀಯ ಪ್ರೇರಿತವಾಗಿ ಉದ್ದೇಶ ಪೂರ್ವಕವಾಗಿಯೇ ದಾಳಿ ನಡೆಸಲಾಗಿದೆ. ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಕೇಂದ್ರ ಸರ್ಕಾರ ಇಂತಹ ಆಲೋಚನೆಗಳನ್ನು ಕೈಬಿಟ್ಟು ಆಂತರಿಕ ಭದ್ರತೆ ಹೆಚ್ಚಿಸಿ ಭಯೋತ್ಪಾದನೆ ಮಟ್ಟ ಹಾಕಲಿ ಎಂದು ಹೇಳಿದರು.
ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿಗೆ ಮೀಸಲಿರುವ ಹಣವನ್ನು ಸರ್ಕಾರ ಬಿಡುಗಡೆಗೊಳಿಸುತ್ತಿದೆ. ಅನುದಾನವನ್ನು ವ್ಯವಸ್ಥಿತವಾಗಿ ಬಳಸಿಕೊಂಡು ಗಣಿಭಾದಿತ ಭಾಗಗಳಲ್ಲಿ ಅಗತ್ಯ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಅಂಗನವಾಡಿ, ಶಾಲೆ, ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದರು.
ಲೋಕೇಶ್, ರಮೇಶ್, ಫಣೀಂದ್ರಮುನಿ, ಜಗದೀಶ್, ಧನಂಜಯ, ಶಿವಣ್ಣ ಹಾಗೂ ಗ್ರಾಮಸ್ಥರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.