ಶಿರಾ: ಶಿಕ್ಷಣಕ್ಕೆ ಬಡತನ ಎಂದೂ ಅಡ್ಡಿಯಾಗಬಾರದು. ಬಡವರಾಗಿ ಹುಟ್ಟುವುದು ತಪ್ಪಲ್ಲ. ಆದರೆ ಬಡವರಾಗಿ ಹಾಗೂ ಅವಿದ್ಯಾವಂತರಾಗಿ ಬದುಕುವುದು ತಪ್ಪು ಎಂದು ಸೇವಾಲಾಲ್ ಬಂಜಾರ (ಲಂಬಾಣಿ) ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷ ಪರುಶುರಾಂ ನಾಯ್ಕ ಹೇಳಿದರು.
ನಗರದಲ್ಲಿ ಸೇವಾಲಾಲ್ ಬಂಜಾರ (ಲಂಬಾಣಿ) ಶ್ರೇಯೋಭಿವೃದ್ಧಿ ಸಂಘದಿಂದ ಈಚೆಗೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದಾಗ ಮಾತ್ರ ಬಂಜಾರ ಸಮುದಾಯ ಮುಖ್ಯವಾಹಿನಿಗೆ ಬರಲು ಸಾಧ್ಯ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗಬೇಕು ಎಂದರು.
ಸಮಾಜದ ಮುಖಂಡ ಕೆ.ಎನ್.ಶೇಷಾನಾಯ್ಕ ಮಾತನಾಡಿ, ಸರ್ಕಾರ ಬಡವರು ಮತ್ತು ಶೋಷಿತ ಸಮುದಾಯಗಳಿಗೆ ಅನುಕೂಲವಾಗುವಂತೆ ಮೊರಾರ್ಜಿ, ನವೋದಯ, ಕಿತ್ತೂರು ಚೆನ್ನಮ್ಮ ವಸತಿ ಶಾಲೆಗಳನ್ನು ತೆರೆದಿದೆ. ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುವ ಮೂಲಕ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂದರು.
ಮುಖ್ಯಶಿಕ್ಷಕ ಮಂಜಾನಾಯ್ಕ, ಸಂಘದ ಗೌರವಾಧ್ಯಕ್ಷ ನಾರಾಯಣ ನಾಯ್ಕ, ನಾನ್ಯಾನಾಯ್ಕ, ರಂಗಸ್ವಾಮಿ ನಾಯ್ಕ, ಪ್ರಧಾನ ಕಾರ್ಯದರ್ಶಿ ರಂಗನಾಯ್ಕ, ಸಂಚಾಲಕ ಮೀಠ್ಯಾನಾಯ್ಕ, ರಂಗನಾಯ್ಕ, ಭೀಮಾನಾಯ್ಕ, ರಾವ್ಯಾನಾಯ್ಕ, ಕುಮಾರನಾಯ್ಕ, ದೇವ್ಲಾನಾಯ್ಕ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.